More

    ಫೆ.23 ರಂದು ಮಂಡ್ಯ ಡಿಸಿ ಕಚೇರಿಗೆ ದಿಗ್ಬಂಧನ

    ಮೈಸೂರು: ಕಬ್ಬಿಗೆ ನ್ಯಾಯಯುತ ಬೆಲೆ ಮತ್ತು ಎಸ್‌ಎಪಿ ಘೋಷಿಸುವಂತೆ ಸರ್ಕಾರವನ್ನು ಆಗ್ರಹಿಸಿ ನಡೆಯುತ್ತಿರುವ ಚಳವಳಿಯ ಮುಂದುವರಿದ ಭಾಗವಾಗಿ ಫೆ.23ರಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ರೈತರಿಂದ ದಿಗ್ಬಂಧನ ಮಾಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.


    ಸಾಹಿತಿ ದೇವನೂರ ಮಹಾದೇವ ಅವರು ಹೇಳಿದಂತೆ, ಬಿಜೆಪಿ ಸರ್ಕಾರ ಜನಪ್ರತಿನಿಧಿ ಸರ್ಕಾರವಲ್ಲ, ಹಣಪ್ರತಿನಿಧಿ ಸರ್ಕಾರ. ಅಂತಃಕರಣವಿಲ್ಲದ ಜೀವ ವಿರೋಧಿ ಸರ್ಕಾರವನ್ನು ವಿಧಾನಸೌಧದಿಂದ ಖಾಲಿ ಮಾಡಿಸಲು ಮೆರವಣಿಗೆ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    100 ದಿನಗಳಿಂದ ಅಹೋರಾತ್ರಿ ಧರಣಿ ಮಾಡುತ್ತಿದ್ದೇವೆ. 6 ದಿನ ರೈತರು ಆಮರಣಾಂತ ಉಪವಾಸ ಮಾಡಿದ್ದಾರೆ. ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ಕಳುಹಿಸಿದ ಬಳಿಕವೂ ತಲೆಕೆಡಿಸಿಕೊಂಡಿಲ್ಲ. ಸರ್ಕಾರದ ರೈತ ವಿರೋಧಿ ನಡೆಯನ್ನು ಖಂಡಿಸಿ ನಡೆಯಲಿರುವ ಪ್ರತಿಭಟನೆಯಲ್ಲಿ 100 ಟ್ರಾೃಕ್ಟರ್, ಎತ್ತಿನ ಗಾಡಿ, ರೈತರು ಪಶುಗಳೊಂದಿಗೆ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

    ಮೋದಿಗೆ ಪ್ರತಿಭಟನೆ ಎಚ್ಚರಿಕೆ: ಫೆ.24ರ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ಮಟ್ಟದಲ್ಲಿ ಹೋರಾಟವನ್ನು ವಿಸ್ತರಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಎಲ್ಲಿಯೇ ಸಭೆ, ಸಮಾರಂಭ ಮಾಡಿದರೂ ಆ ಜಾಗದಲ್ಲಿಯೇ ಪ್ರತಿಭಟನೆ, ಧರಣಿ ನಡೆಸಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

    ಅಧಿಕಾರಿಗಳ ಜಟಾಪಟಿ ನಾಚಿಕೆ ಪಡುವಂತದ್ದು: ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಜಟಾಪಟಿ ನಾಚಿಕೆ ಪಡುವಂತದ್ದು. ರಾಜ್ಯ ಸರ್ಕಾರಕ್ಕೆ ಆಡಳಿತದ ಮೇಲೆ ನಿಯಂತ್ರಣವಿಲ್ಲ. ತಾಕತ್ತಿದ್ದರೆ ಇಬ್ಬರನ್ನೂ 6 ತಿಂಗಳು ಅಮಾನತುಗೊಳಿಸಿ ತನಿಖೆ ನಡೆಸಬೇಕು. ಅಧಿಕಾರಿಗಳನ್ನು ನಿಯಂತ್ರಿಸಲಾಗದ ಸಿಎಂ ಬಸವರಾಜ ಬೊಮ್ಮಾಯಿ ರೇಸ್‌ಕೋರ್ಸ್ ರಸ್ತೆಯಲ್ಲಿ ಇಬ್ಬರೂ ಅಧಿಕಾರಿಗಳ ಕುಸ್ತಿ ಆಯೋಜಿಸಿ ಚಪ್ಪಾಳೆ ತಟ್ಟುವುದು ಒಳಿತು. ಬಿಳಿಯಾನೆಗಳಾದ ಐಎಎಸ್, ಐಪಿಎಸ್ ಅಧಿಕಾರಿಗಳಿಂದ ಜನರ ಸಮಸ್ಯೆಗಳು ಉಲ್ಬಣವಾಗುತ್ತಿದೆ ಎಂದರು.
    ರೈತ ಮುಖಂಡ ಪ್ರಸನ್ನ ಎನ್.ಗೌಡ ಮಾತನಾಡಿ, ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಹೋರಾಟ ನಡೆಸಲಾಗುತ್ತಿದೆ. ಈ ಹೋರಾಟಕ್ಕೂ ಎಚ್ಚರಗೊಳ್ಳದಿದ್ದರೆ ಜನರ ತಾಳ್ಮೆ ಹೊಡೆದು ಬಿಜೆಪಿಗೆ ಬುದ್ಧಿ ಕಲಿಸಲು ಮುಂದಾಗಲಿದ್ದಾರೆ ಎಂದು ಹೇಳಿದರು.
    ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ವಿಜಯೇಂದ್ರ, ಪಿ.ಮರಂಕಯ್ಯ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts