ವಿಜಯವಾಣಿ ಸದ್ದಿಜಾಲ ಆನೇಕಲ್
ಆರೋಗ್ಯ ತಪಾಸಣಾ ಶಿಬಿರಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಅನುಕೂಲವಾಗಿವೆ ಎಂದು ವಕೀಲರ ಸಂಘದ ಅಧ್ಯಕ್ಷ ಆರ್.ರಮೇಶ್ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ, ನ್ಯಾಯಾಂಗ ಇಲಾಖೆ ಮತ್ತು ನಿಸರ್ಗ ಸೇವಾ ಸಂಸ್ಥೆಯ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ವಕೀಲರು ಪ್ರತಿದಿನ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಒತ್ತಡದಿಂದಾಗಿ ಆರೋಗ್ಯದ ಸಮಸ್ಯೆಗಳು ಉಂಟಾಗುತ್ತವೆ. ಹಾಗಾಗಿ ವಕೀಲರು ಆರೋಗ್ಯದ ಬಗ್ಗೆ ಕಾಳಜಿ ತೋರಲು ಅನುಕೂಲವಾಗುವಂತೆ ನ್ಯಾಯಾಲಯದ ಆವರಣದಲ್ಲಿ ಶಿಬಿರ ಆಯೋಜಿಸಲಾಗಿದೆ ಎಂದರು.
ವಕೀಲ ಪ್ರಕಾಶ್ ಮಾತನಾಡಿ, ರಕ್ತದಾನ ಒಬ್ಬ ವ್ಯಕ್ತಿಯ ಜೀವ ಉಳಿಸಲು ಉಪಯುಕ್ತವಾಗಿದೆ. ಹಾಗಾಗಿ ಅಂಬೇಡ್ಕರ್ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ನ್ಯಾಯಾಧೀಶರು, ವಕೀಲರು ರಕ್ತದಾನ ಮಾಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದರು.
ಆಕ್ಸ್ಫರ್ಡ್ ಆಸ್ಪತ್ರೆ, ಕಾವೇರಿ ಆಸ್ಪತ್ರೆ, ಚಂದಾಪುರ ನಿಸರ್ಗ ದೃಷ್ಟಿಧಾಮ, ಎಲೆಕ್ಟ್ರಾನಿಕ್ ಸಿಟಿಯ ಹಿಮೋಕೇರ್ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಕಣ್ಣಿನ ತಪಾಸಣೆ, ಇಎನ್ಟಿ, ಸ್ತ್ರೀರೋಗ, ಕೀಲು ಮತ್ತು ಮೂಳೆ ರೋಗ, ಇಸಿಜಿ ತಪಾಸಣೆ ಮಾಡಲಾಯಿತು.