ಹನೂರು: ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಬೋರ್ವೆಲ್ ಕೊರೆಯಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಸೂಚಿಸಿದರು.
ಪಟ್ಟಣದ ಲೋಕೋಪಯೋಗಿ ಅತಿಥಿಗೃಹದ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಂಬಂಧ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಈ ಬಾರಿ ಮಳೆ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದ್ದು, ಸೋಲಿಗರ ಪೋಡು ಹಾಗೂ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದ್ದರಿಂದ ಆಯಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಪಿಡಿಒಗಳು ಭೇಟಿ ನೀಡಿ ಪರಿಶೀಲಿಸಬೇಕು. ಬೋರ್ವೆಲ್ ಕೊರೆಯಿಸಲು ಅಗತ್ಯ ಕ್ರಮವಹಿಸಬೇಕು. ಈ ಸಂಬಂಧ ಒಂದು ವಾರದೊಳಗೆ ವರದಿ ಸಲ್ಲಿಸಬೇಕು. ತೀವ್ರ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ತಾಪಂ ಇಒ ಉಮೇಶ್, ಜಲಜೀವನ್ ಮಿಷನ್ ಯೋಜನೆಯ ಎಇಇ ಹರೀಶ್, ಪಿಡಿಒಗಳಾದ ಸುರೇಶ್, ನಂದೀಶ್, ನಂಜುಂಡಸ್ವಾಮಿ, ಸೆಲ್ವರಾಜು, ಮಾದೇಶ್ ಇನ್ನಿತರರು ಇದ್ದರು.