ಹುಬ್ಬಳ್ಳಿ : ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವುದು ಹಾಗೂ ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ಘಟನೆ ಖಂಡಿಸಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ ಬ್ರಾಹ್ಮಣ ಸಮಾಜದವರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿಯ ಸ್ಟೇಶನ್ ರಸ್ತೆಯ ಈಶ್ವರ ದೇವಸ್ಥಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಯಣ್ಣ ವೃತ್ತದಲ್ಲಿ ಕೆಲ ಸಮಯ ರಸ್ತೆ ತಡೆದು, ಪ್ರತಿಭಟಿಸಿದರು.
ಸಿಇಟಿ ಪರೀಕ್ಷೆ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಬೇಕು. ಧಾರ್ವಿುಕ ಮನೋಭಾವನೆಗೆ ಧಕ್ಕೆ ತರುವ ಕಾರ್ಯಗಳು ಭವಿಷ್ಯದಲ್ಲಿ ಪುನರಾವರ್ತನೆಯಾಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದು ಪ್ರವಾಸಿಗರನ್ನು ಗುರಿಯಾಗಿಟ್ಟುಕೊಂಡು ಹತ್ಯೆ ಮಾಡಿರುವುದು ಖಂಡನೀಯ. ಕೇಂದ್ರ ಸರ್ಕಾರ ಭಯೋತ್ಪಾದನಾ ಚಟುವಟಿಕೆಗಳನ್ನು ತಡೆಯಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕು. ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಂಪೂರ್ಣ ನಿಮೂಲನೆ ಮಾಡಬೇಕು ಎಂದು ಆಗ್ರಹಿಸಿದರು.
ಸಮುದಾಯದ ಮುಖಂಡ ಜಯತೀರ್ಥ ಕಟ್ಟಿ ಮಾತನಾಡಿ, ಸಿಇಟಿ ಪರೀಕ್ಷೆಗೆ ಹಾಜರಾಗಲು ತೆರಳಿದ್ದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಭಾರತದಲ್ಲಿ ಶಾಂತಿ ಕದಡುವ ಕಾರ್ಯವನ್ನು ಭಯೋತ್ಪಾದಕರು ಮಾಡುತ್ತಿದ್ದಾರೆ. ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಖಂಡನೀಯ. ಕೇಂದ್ರ ಸರ್ಕಾರ ಭಯೋತ್ಪಾದನೆ ನಿಯಂತ್ರಿಸಿದರೂ ಸಹ ಇಂತಹ ಘಟನೆಗಳು ನಡೆಯುತ್ತಿವೆ. ಸರ್ಕಾರ ಸಂಪೂರ್ಣವಾಗಿ ಭಯೋತ್ಪಾದನೆ ನಿಮೂರ್ಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ವತಿಯಿಂದ ತಹಶೀಲ್ದಾರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಯಿತು. ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಇದೇ ಸಂದರ್ಭದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿವಿಧ ಸಮಾಜಗಳ ಮುಖಂಡರು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಜನಿವಾರ ಕತ್ತರಿಸಿರುವ ಹಾಗೂ ಭಯೋತ್ಪಾದನಾ ದಾಳಿಯನ್ನು ಖಂಡಿಸಿದರು.
ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ಸತೀಶ ಶೇಜವಾಡಕರ, ರವಿ ಆಚಾರ್ಯ, ಲಕ್ಷ ಣ ಕುಲಕರ್ಣಿ, ಹನುಮಂತಸಾ ನಿರಂಜನ, ಸಂಜೀವ ಜೋಶಿ, ಬಲಭೀಮ ಪೋದ್ದಾರ, ಗಿರೀಶ ಪತ್ತಾರ, ಜಯತೀರ್ಥ ಆಚಾರ್ಯ ಹುಂಡೇಕಾರ, ಸಂಧ್ಯಾ ದೀಕ್ಷಿತ, ಉಷಾ ಮಳಗಿ, ಹನುಮಂತರಾವ್ ಡಂಬಳ, ಜಯತೀರ್ಥ ಆಚಾರ್ಯ, ಭಾಗಶ್ರೀ ಹಾಗೂ ಇತರರು ಹಾಜರಿದ್ದರು.