More

    ಹೆಣ್ಣು ಭ್ರೂಣ ಹತ್ಯೆ ಆರೋಪಿಗಳ ಬಂಧನ

    • ಪಾಂಡವಪುರ: ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಭಾನುವಾರ ತಡರಾತ್ರಿ ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ.
    • ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಆನಂದ, ಆತನ ಪತ್ನಿ ಅಶ್ವಿನಿ, ಖಾಸಗಿ ನರ್ಸಿಂಗ್ ಹೋಂನ ನರ್ಸ್ ಗಿರಿಜಾಂಬೆ ಹಾಗೂ ಅಶ್ವಿನಿ ತಾಯಿ ರತ್ನಮ್ಮ ಬಂಧಿತರು. ಗರ್ಭಪಾತಕ್ಕೆ ಒಳಗಾಗಿದ್ದ ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಶಿವಲಿಂಗನಾಯಕ ಅವರ ಪತ್ನಿ ಪುಷ್ಪಲತಾ ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪಾಂಡವಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಆನಂದ ಮತ್ತು ಆತನ ಪತ್ನಿ ಅಶ್ವಿನಿ ಡಿ ಗ್ರೂಪ್ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಿಂಭಾಗದ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ವಾಸವಿದ್ದ ಸಿಬ್ಬಂದಿ ವಸತಿ ಗೃಹವನ್ನೇ ಕೃತ್ಯಕ್ಕೆ ಬಳಸಿಕೊಂಡು ಹೆಣ್ಣು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
    • ಭಾನುವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಟಿಎಚ್‌ಒ ಕಚೇರಿ ಹಿಂಭಾಗದಲ್ಲೇ ಹಲವು ವರ್ಷಗಳಿಂದ ಕೃತ್ಯ ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
    • ಮೇಲುಕೋಟೆ ಕ್ಷೇತ್ರದಲ್ಲಿ ಎರಡನೇ ಪ್ರಕರಣ : ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಎರಡನೇ ಬಾರಿ ಬೆಳಕಿಗೆ ಬಂದಿದೆ. ಈ ಹಿಂದೆಯೂ ಕ್ಷೇತ್ರ ವ್ಯಾಪ್ತಿಯ ಹುಳ್ಳೇನಹಳ್ಳಿ ಸಮೀಪದ ಅಲೆಮನೆಯೊಂದರಲ್ಲಿ ಪ್ರಕರಣ ಪತ್ತೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಅದೇ ಮಾದರಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದರ ಹಿಂದೆ ದೊಡ್ಡ ಮಟ್ಟದ ಜಾಲವಿರಬಹದು ಎಂಬ ಮಾತುಗಳು ಸಾರ್ವಜನಿಕರಿಂದ ವ್ಯಕ್ತವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts