ಮೈಸೂರು: ನಗರಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯಿತಿಗಳನ್ನು ನಗರ ಪಾಲಿಕೆಗೆ ಸೇರ್ಪಡೆಗೊಳಿಸಬಾರದೆಂದು ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈಶಂಕರ್ ಆಗ್ರಹಿಸಿದರು.
ಕಡಕೊಳ, ಬೋಗಾದಿ, ಕೂರ್ಗಳ್ಳಿ ಮತ್ತು ಜಯಪುರ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳನ್ನು ನಗರ ಪಾಲಿಕೆ ವ್ಯಾಪ್ತಿಗೆ ಸೇರಿಸುವ ಚರ್ಚೆ ನಡೆಯುತ್ತಿದೆ. ಇಂದಿಗೂ ಈ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿದೆ. ಒಂದುವೇಳೆ ಪಾಲಿಕೆ ವ್ಯಾಪ್ತಿಗೆ ಬಂದರೆ ಕೃಷಿ ಭೂಮಿ ನಾಶವಾಗುತ್ತದೆ. ಅಲ್ಲದೆ, ತೆರಿಗೆ ಪ್ರಮಾಣ ಕೂಡ ಹೆಚ್ಚಾಗುವ ಹಿನ್ನೆಲೆಯಲ್ಲಿ ಜನರು ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಹೀಗಾಗಿ ಗ್ರಾ.ಪಂ.ಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬಾರದೆಂದು ಒತ್ತಾಯಿಸಿದರು.
ಈಗಾಗಲೇ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಪ್ರಾರಂಭವಾಗಿದೆ. ನಗರಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಬಾರದೆಂದು ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದರು.