ಶಿವಮೊಗ್ಗ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮದ ಕುರುಹು ಸಿಕ್ಕಿದೆ. ಸಿಎಂ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಅವರ ಅವಧಿಯ ಅಕ್ರಮದ ಬಗ್ಗೆ ಜನರಿಗೆ ಉತ್ತರ ನೀಡಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿಕ್ಷಕರ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಬಿರುಸುಗೊಂಡಿದೆ. ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ಶೀಘ್ರದಲ್ಲೇ ರಾಜ್ಯದ ಜನರಿಗೆ ವಾಸ್ತವ ಸಂಗತಿ ತಿಳಿಯಲಿದೆ. ಕಾಂಗ್ರೆಸ್ನವರು ಮೂರು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದಾರೆ ಈಗಾಗಲೇ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಹೇಳಿರುವುದು ನಿಜವಾಗುತ್ತಿದೆ ಎಂದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ಕುಮಾರ್ ಹೇಳಿಕೆಯನ್ನು ಸೋನಿಯಾ, ರಾಹುಲ್ ಗಾಂಧಿ, ಕಡೇ ಪಕ್ಷ ಸಿದ್ದರಾಮಯ್ಯ ಕೂಡಾ ಅಲ್ಲಗಳೆದಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಜನಪರವಾಗಿ ಚಿಂತನೆ ಮಾಡಿಲ್ಲ ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ತಮ್ಮ ಅವಧಿಯಲ್ಲಿ ಅಕ್ರಮ ನಡೆಸಿದ ಕಾಂಗ್ರೆಸ್ ಮುಖಂಡರು ಈಗ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಪೋಸ್ಟರ್ ರಾಜಕೀಯ ಮಾಡುತ್ತಿದ್ದಾರೆ. ಇದರ ವಿರುದ್ಧ ದೂರು ದಾಖಲಿಸಿದ್ದೇವೆ. ಇಂತಹ ಕೀಳು ಮಟ್ಟದ ರಾಜಕೀಯ ಕಾಂಗ್ರೆಸ್ನವರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಕೇಂದ್ರದಿಂದ ಪಿಎಫ್ಐ ನಿಷೇಧ
ದೇಶ ವಿರೋಧಿ ಕೃತ್ಯ ನಡೆಸುತ್ತಿರುವ ಪಿಎಫ್ಐ ನಿಜ ಬಣ್ಣ ಬಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಬಿಎಸ್ವೈ ಹೇಳಿದರು.
ದೇಶದ ವಿವಿಧೆಡೆ ಪಿಎಫ್ಐ, ಎಸ್ಡಿಪಿಐ, ಸಿಎಫ್ಐ ಮುಖಂಡರ ಮೇಲೆ ದಾಳಿ ನಡೆಸಲಾಗುತ್ತಿದೆ. ರಾಜ್ಯದಲ್ಲಿ 40ಕ್ಕೂ ಹೆಚ್ಚು ಕಡೆ ಪೊಲೀಸರ ದಾಳಿ ನಡೆಸಿ ಅನೇಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸುವ ಜತೆಗೆ ಕೇಂದ್ರ ಸರ್ಕಾರದ ಪತನಕ್ಕೂ ಪಿಎಫ್ಐ ಪ್ರಯತ್ನಿಸುತ್ತು ಎಂಬ ಅಂಶ ಬಹಿರಂಗವಾಗಿದೆ. ಶೀಘ್ರದಲ್ಲೇ ಪಿಎಫ್ಐ ವಿರುದ್ಧ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.