More

    ಮತ್ತೆ ಶಾಸಕರಾಗುತ್ತೇವೆಂಬ ಭ್ರಮೆ ಬೇಡ: ಪಕ್ಷದ ಶಾಸಕರಿಗೆ ಬಿಎಸ್‌ವೈ ಎಚ್ಚರಿಕೆ ನುಡಿ

    ಶಿವಮೊಗ್ಗ: ಮತ್ತೊಮ್ಮೆ ಶಾಸಕರಾಗುತ್ತೇವೆ ಎಂದು ಹಾಲಿ ಶಾಸಕರು ಮೈಮರೆಯುವಂತಿಲ್ಲ. ಅಂತಹ ಭ್ರಮೆಗಳಿಂದ ಮೊದಲು ಹೊರಬರಬೇಕು. ಕ್ಷೇತ್ರದಲ್ಲಿ ನಿರಂತರ ಪ್ರವಾಸ ಮಾಡಿ ಮುಂದಿನ ಚುನಾವಣೆಗೆ ಸಜ್ಜಾಗಬೇಕೆಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ.
    ರಾಷ್ಟ್ರೀಯ ಸಂಸದೀಯ ಮಂಡಳಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಬೆರೆತು ಪಕ್ಷ ಸಂಘಟನೆ ಮಾಡಬೇಕೆಂದು ತಿಳಿಸಿದರು.
    ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಅದನ್ನು ಎಲ್ಲರೂ ಪಾಲಿಸಬೇಕು. ಮಂಗಳೂರಿಗೆ ಆಗಮಿಸಿದ್ದ ವೇಳೆ ಮೋದಿ ಕೆಲವು ಸಲಹೆಗಳನ್ನು ನೀಡಿದ್ದಾರೆ. ಪ್ರತಿ ತಿಂಗಳೂ ರಾಜ್ಯಕ್ಕೆ ಬರುವುದಾಗಿ ಹೇಳಿದ್ದಾರೆ. ಅವರ ಪ್ರವಾಸವನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕೆಂದರು.
    ಯುವಕರಲ್ಲಿ ಪಕ್ಷದ ಬಗ್ಗೆ ಒಲವು ಹೆಚ್ಚುವಂತೆ ನೋಡಿಕೊಳ್ಳಬೇಕು. ಹಿಂದುಳಿದ ವರ್ಗಗಳಲ್ಲಿ ವಿಶ್ವಾಸ ಹೆಚ್ಚಿಸುವ ಕೆಲಸವಾಗಬೇಕು. ಮುಂದಿನ ಚುನಾವಣೆಯಲ್ಲಿ ಭದ್ರಾವತಿಯಲ್ಲೂ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಬೇಕು. ಏಳೂ ಕ್ಷೇತ್ರಗಳಲ್ಲಿ ನಾವು ಜಯಗಳಿಸಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯತತ್ಪರರಾಗಬೇಕೆಂದರು.
    ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನಗೆ ದೊಡ್ಡ ಹುದ್ದೆ ನೀಡಿದ್ದಾರೆ. ಅವರ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಸಾಮೂಹಿಕ ನಾಯಕತ್ವದಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts