ದೆಹಲಿ: ರಾಜ್ಯದ ಪ್ರತಿಯೊಂದ ಕ್ಷೇತ್ರಗಳ ಬಗ್ಗೆಯೂ ಹೈಕಮಾಂಡ್ ಜತೆಗೆ ಸೇರಿ ಚರ್ಚೆ ಮಾಡಿದ್ದೇವೆ. ಬಳಿಕ ಒಮ್ಮತದ ನಿರ್ಧಾರಕ್ಕೆ ಬಂದಿರುವುದು. ಇನ್ನಷ್ಟು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಕದ ತಟ್ಟುತ್ತಿದ್ದಾರೆ. ನಾನು ಅಂತಹವರ ಹೆಸರು ಬಹಿರಂಗ ಪಡಿಸುವುದಿಲ್ಲ. ನಮ್ಮಲ್ಲಿ ಎಲ್ಲವೂ ಅಂತಿಮವಾಗಿದ್ದು, ಬಿಜೆಪಿಯ ಇನ್ನಷ್ಟು ನಾಯಕರು ಕಾಂಗ್ರೆಸ್ಗೆ ಬರಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಡಿಕೆಶಿ ಮಾತನಾಡುತ್ತಾ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೆಲ್ಲದರ ನಡುವೆ ಬಿಜೆಪಿ ಮಾತ್ರ ಯಾಕೆ ಇನ್ನೂ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಮಾಡುತ್ತಿಲ್ಲ ಎನ್ನುವುದೇ ನನ್ನ ಪ್ರಶ್ನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯ ರಾಜಧಾನಿಯಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಸಲು ಇನ್ನೇನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿವೆ. ಹೀಗಿದ್ದೂ ಬಿಜೆಪಿ ಮಾತ್ರ ಇನ್ನೂ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಘೋಷಣೆ ಮಾಡಿಲ್ಲ. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರೆಳಿಸಿದೆ. ಈ ನಡುವೆ ಸಿಎಂ ಬೊಮ್ಮಾಯಿ ಮಾತನಾಡುತ್ತಾ, ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಹೊಸ ಮುಖಗಳಿಗೆ ಈ ಬಾರಿ ಮಣೆ ಹಾಕಲಾಗುವುದು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು.
ಇದೀಗ ನಾಳೆ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆ, ಶನಿವಾರ ನಡೆಯಲಿರುವ ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಮತ್ತು ಭಾನುವಾರ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದ್ದು, ಬಿಎಸ್ವೈ ಮೂರು ದಿನಗಳ ಕಾಲ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಇದನ್ನೂ ಓದಿ: ಚಾಲಕರೇ ಎಚ್ಚರ; ನಿಮ್ಮ ಆಟೋದಲ್ಲಿರುವ ರಾಜಕೀಯ ಪಕ್ಷಗಳ ಪೋಸ್ಟರ್ ತೆಗೆಯದಿದ್ದರೆ ಬೀಳಲಿದೆ ದಂಡ