ಬಳ್ಳಾರಿ: ಕರೊನಾ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಈ ಬಗ್ಗೆ ಕಾರ್ಮಿಕರು ಚಿಂತಿತರಾಗಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಅರ್ಜುನ ಮಲ್ಲೂರು ತಿಳಿಸಿದರು.
ನಗರದ ವಿವಿಧೆಡೆ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ನಗರದ ಸರ್ಕಾರಿ ಅತಿಥಿಗೃಹದ ಬಳಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಸಂಕೀರ್ಣಕ್ಕೆ ಭೇಟಿ ನೀಡಿ ಗುತ್ತಿಗೆದಾರರು ಕಾರ್ಮಿಕರಿಗೆ ಒದಗಿಸಿರುವ ಸೌಲಭ್ಯ ಪರಿಶೀಲಿಸಿದರು. ಮುಂಡ್ರಿಗಿ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ವಸತಿ ಸಮುಚ್ಛಯಕ್ಕೆ ತೆರಳಿ ಕಾರ್ಮಿಕರ ಅಹವಾಲು ಸ್ವೀಕರಿಸಿದರು. ಕಾರ್ಮಿಕರಿಗೆ ಶೌಚಗೃಹ ವ್ಯವಸ್ಥೆ ಸೇರಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಮತ್ತೆ ನಿಮ್ಮನ್ನು ಭೇಟಿ ಮಾಡುತ್ತೇನೆ. ಸಮಸ್ಯೆಗಳಿದ್ದರೆ ಗಮನಕ್ಕೆ ತರುವಂತೆ ನ್ಯಾಯಾಧೀಶ ಅರ್ಜುನ ಮಲ್ಲೂರು ಕಾರ್ಮಿಕರಿಗೆ ತಿಳಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ ಐಲಿ, ಕಾರ್ಮಿಕ ನಿರೀಕ್ಷಕ ರವಿ ಇತರರಿದ್ದರು.