ಬೆಳಗಾವಿ: ಜಿಲ್ಲೆಯಲ್ಲಿ ಕರೊನಾ ಹಾಗೂ ಇತರ ಕಾಯಿಲೆಗಳಿಂದ ಮರಣ ಪ್ರಮಾಣ ಹೆಚ್ಚಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೂಚನೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಕೋವಿಡ್-19 ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರೊನಾ ವೈರಸ್ ಸೋಂಕಿತರು ಸೇರಿ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ತಕ್ಷಣ ಚಿಕಿತ್ಸಾ ವ್ಯವಸ್ಥೆ ಮಾಡಬೇಕು. ಅದಕ್ಕಾಗಿ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಸೇರಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರೊನಾ ಹೊರತುಪಡಿಸಿ ಇತರ ಕಾಯಿಲೆಗಳಿಗೆ ಚಿಕಿತ್ಸೆ ವ್ಯವಸ್ಥೆ ನೀಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ತುರ್ತು ಆರೋಗ್ಯ ಚಿಕಿತ್ಸೆಗೆ ಆಂಬುಲೆನ್ಸ್ ಸಜ್ಜುಗೊಳಿಸಬೇಕು. ಒಂದು ವೇಳೆ ಹೆಚ್ಚಿನ ಆಂಬ್ಯುಲೆನ್ಸ್ ಅವಶ್ಯಕತೆ ಬಿದ್ದರೆ ತಕ್ಷಣ ಬಾಡಿಗೆ ಪಡೆಯಬೇಕು ಎಂದು ಸೂಚನೆ ನೀಡಿದರು.
ಶಾಸಕ ಮಹೇಶ ಕುಮಠಳ್ಳಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಅಪರ ಡಿಸಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್ ಇತರರು ಇದ್ದರು.
ಬಳಿಕ ಬೆಳಗಾವಿ ನಗರದ ಕುಮಾರಸ್ವಾಮಿ ಲೇಔಟ್ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್ಗೆ ಸಚಿವ ರಮೇಶ ಭೇಟಿ ನೀಡಿ, ಪರಿಶೀಲಿಸಿದರು. ಬಿಸಿಎಂ ಜಿಲ್ಲಾಧಿಕಾರಿ ರಾಮನಗೌಡ ಕನ್ನೊಳ್ಳಿ ಅವರಿಂದ ಮಾಹಿತಿ ಪಡೆದುಕೊಂಡರು.