ಇಂದೋರ್: ಸುಮಾರು 57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನೀರಿನಿಂದ ತುಂಬಿ ಹರಿಯುತ್ತಿದ್ದ ಕಾಲುವೆಯೊಂದಕ್ಕೆ ಉರುಳಿ ಬಿದ್ದಿರುವ ಘಟನೆ ಮಧ್ಯಪ್ರದೇಶದ ಸಿದ್ದಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಸದ್ಯದ ಮಾಹಿತಿ ಪ್ರಕಾರ ಘಟನೆಯಲ್ಲಿ 38 ಜನ ಮೃತಪಟ್ಟಿದ್ದು, 10 ಜನರನ್ನು ರಕ್ಷಿಸಲಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಸರ್ಕಾರಿ ಬಸ್ ಸಿದ್ದಿಯಿಂದ ಸತ್ನಾ ಕಡೆ ಹೊರಟಿತ್ತು. ಸಿದ್ದಿ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಕಾಲುವೆಗೆ ಉರುಳಿ ಬಿದ್ದಿದೆ.
ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಅವರು, ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಸಿದ್ದಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸ್ಥಳದಲ್ಲಿ ಸಾವು ನೋವು ಹೆಚ್ಚಾಗುವ ಸಂಭವವಿದ್ದು, ಪರಿಹಾರ ಕಾರ್ಯಾಚರಣೆ ಚುರುಕುಗೊಂಡಿದೆ.