ಬೆಂಗಳೂರು: ಅನಗತ್ಯವಾಗಿ ನೀರು ಪೋಲಾಗುವುದನ್ನು ತಡೆಯುವ ನಿಟ್ಟಿನಲ್ಲಿ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ಅಪಾರ್ಟ್ಮೆಂಟ್, ಐಷಾರಾಮಿ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿರುವ ನಲ್ಲಿಗಳಿಗೆ ಕಡ್ಡಾಯವಾಗಿ ಏರಿಯೇಟರ್(ವಾಟರ್ ಟ್ಯಾಪ್ ಮಾಸ್ಕ್) ಅಳವಡಿಸಬೇಕು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಸೂಚನೆ ನೀಡಿದ್ದಾರೆ.
ಜಲಮಂಡಳಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಬೆಂಗಳೂರು ನಗರ ಪ್ಲಂಬರ್ ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ನೀಡಿದರು.
ಏರಿಯೇಟರ್ಗಳು ಕಡಿಮೆ ದರದಲ್ಲಿ ಲಭ್ಯವಿದ್ದು, ನೀರಿನ ಬಿಲ್ನ್ನು ಗಣನೀಯವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಏರಿಯೇಟರ್ ಅಳವಡಿಸದ ನಲ್ಲಿಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಪೋಲಾಗುತ್ತದೆ. ಈ ಸಾಧನ ಅಳವಡಿಸುವುದರಿಂದ ಶೇ.60 ರಿಂದ 85 ರಷ್ಟು ನೀರಿನ ಉಳಿತಾಯ ಸಾಧ್ಯ ಎಂದರು.
ಮಾ.31ರ ವರೆಗೆ ಗಡುವು
ಮಾ.21 ರಿಂದ ಮಾ.31ರ ವರೆಗೆ ಸ್ವಯಂ ಪ್ರೇರಿತವಾಗಿ ನಲ್ಲಿಗಳಿಗೆ ಏರಿಯೇಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 10 ದಿನಗಳಲ್ಲಿ ತಮಗೆ ಸಿಗುವ ಏರಿಯೇಟರ್ ಗಳನ್ನು ನಲ್ಲಿಗಳಿಗೆ ಅಳವಡಿಸಿಕೊಳ್ಳಬೇಕು. ಗಡುವಿನ ಅವಧಿಯಲ್ಲಿ ಏರಿಯೇಟರ್ ಅಳವಡಿಸಿಕೊಳ್ಳದಿರುವ ಕಟ್ಟಡಗಳಲ್ಲಿ ಜಲಮಂಡಳಿಯ ಪ್ಲಂಬರ್ಗಳಿಂದ ಏರಿಯೇಟರ್ಗಳನ್ನು ಅಳವಡಿಸಲಾಗುತ್ತದೆ. ಈ ವೆಚ್ಚವನ್ನು ಕಟ್ಟಡ ಮಾಲೀಕರಿಂದ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸ್ವಯಂ ಪ್ರೇರಿತರಾಗಿ ಅಳವಡಿಸಿ
ಮನೆಯಲ್ಲಿರುವ ನಲ್ಲಿ, ಶವರ್ ಸೇರಿದಂತೆ ಅನಗತ್ಯವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುವ ಕಡೆಗಳಲ್ಲಿ ಏರಿಯೇಟರ್ಗಳನ್ನು ಅಳವಡಿಸಿಕೊಳ್ಳಬೇಕು. ಈ ಉಪಕರಣ ಮಾರುಕಟ್ಟೆಯಲ್ಲಿ 60 ರೂ.ನಿಂದ ಲಭ್ಯವಿದೆ. ಇದರಿಂದ ಮನೆಯಲ್ಲಿ ನೀರಿನ ಬಳಕೆ ಗಣನೀಯವಾಗಿ ಕಡಿಮೆಯಾಗುತ್ತದೆ. ಹಾಗೆಯೇ, ನೀರಿನ ಬಿಲ್ ಕೂಡಾ ಕಡಿಮೆಯಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಜಲಮಂಡಳಿಯ ಕೇಂದ್ರ ಕಛೇರಿಯಲ್ಲಿರುವ ನಲ್ಲಿಗಳಿಗೆ ಈಗಾಗಲೇ ಏರಿಯೇಟರ್ ಅಳವಡಿಸುವ ಕಾರ್ಯ ಪ್ರಾರಂಭಿಸಲಾಗಿದೆ. ಜಲಮಂಡಳಿಯ ಇತರೆ ಕಚೇರಿಗಳಲ್ಲಿ ಕಡ್ಡಾಯವಾಗಿ ಸಾಧನ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಮಾರ್ಚ್ 21 ರಿಂದ ಎಲ್ಲರಿಗೂ ಈ ಸೂಚನೆ ಅನ್ವಯವಾಗಲಿದೆ.
-ಡಾ.ವಿ.ರಾಮ್ ಪ್ರಸಾತ್ ಮನೋಹರ್, ಅಧ್ಯಕ್ಷ, ಜಲಮಂಡಳಿ