ಬೈಂದೂರು ಶಾಸಕ ಗಂಟಿಹೊಳೆ ಆಗ್ರಹ
ಉಡುಪಿಯ ಜಿಪಂ ಕಚೇರಿಯಲ್ಲಿ ಸಭೆ
ವಿಜಯವಾಣಿ ಸುದ್ದಿಜಾಲ ಉಡುಪಿ
ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನಾರಾಯಣ ಮೊಗವೀರ ನಾಪತ್ತೆಯಾಗಿದ್ದು, ಅವರ ಕುಟುಂಬಕ್ಕೆ ಇನ್ನೆರಡು ದಿನದಲ್ಲಿ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ನೀಡಿ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹಿಸಿದರು.
ಉಡುಪಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್ ಉಪಸ್ಥಿತಿಯಲ್ಲಿ ಮೀನುಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಬೈಂದೂರು ಕ್ಷೇತ್ರದ ಮೀನುಗಾರಿಕಾ ಯೋಜನೆಗಳು ಹಾಗೂ ಮೀನುಗಾರರಿಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ
ಜ.2ರಂದು ಪರ್ಸಿನ್ ಬೋಟ್ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಮೀನುಗಾರ ನಾರಾಯಣ ಮೊಗವೀರ ನಾಪತ್ತೆಯಾಗಿದ್ದಾರೆ. ಇನ್ನೂ ಅವರ ಸುಳಿವು ಸಿಗದಿರುವುದು ದು:ಖದಾಯಕ ಸಂಗತಿ. ಘಟನೆಯ ಬಳಿಕ ನಾನು ಅವರ ಮನೆಗೆ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದೇನೆ. ನಾಪತ್ತೆಯಾಗಿರುವ ಮೀನುಗಾರನ ಪತ್ತೆ ಕಾರ್ಯಕ್ಕೆ ಜಿಲ್ಲಾಡಳಿತ ಹಾಗೂ ಸಂಬಂಧಿತ ಇಲಾಖೆಗೆ ಮನವಿ ಮಾಡಿದ್ದೆ. ಈ ಬಗ್ಗೆ ಅಗತ್ಯ ಮುತುವರ್ಜಿ ವಹಿಸದಿರುವುದೂ ಖಂಡನೀಯ. ಬಡ ಮೀನುಗಾರರ ನೋವಿಗೆ ಸ್ಪಂದಿಸದೆ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ
ಮೀನುಗಾರರಿಗೆ ಕಷ್ಟದ ಪರಿಸ್ಥಿತಿಯ ಸಮಯದಲ್ಲಿಯೇ ಬಳಕೆಯಾಗುವ ಸಂಕಷ್ಟ ಪರಿಹಾರ ನಿಧಿಯಡಿ 10 ಲಕ್ಷ ರೂ. ತುರ್ತು ಪರಿಹಾರ ನೀಡಲು ಜ.10ರಂದು ಆದೇಶ ಪತ್ರ ಹೊರಡಿಸಲಾಗಿದೆ. 7 ದಿನ ಕಳೆದರೂ ನೊಂದವರ ಮನೆ ಬಾಗಿಲಿಗೆ ತೆರಳಿ ಚೆಕ್ ವಿತರಿಸಿ, ನಿಮ್ಮ ಸಂಕಷ್ಟದಲ್ಲಿ ನಾವೂ ಇದ್ದೇವೆ ಎಂದು ಸಾಂತ್ವನ ಮಾಡಲೂ ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ. ಇನ್ನೆರಡು ದಿನದಲ್ಲಿ ಆ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಲೇಬೇಕು. ಮನೆಯ ಯಜಮಾನನನ್ನು ಕಳೆದುಕೊಂಡು ನೋವಿನಲ್ಲಿರುವ ಕುಟುಂಬಕ್ಕೆ ಸರ್ಕಾರ ನೆರವು ನೀಡಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸಿಯಾದರೂ ಆ ಕುಟುಂಬಕ್ಕೆ ನ್ಯಾಯ ಒದಗಿಸಲು ಸಿದ್ಧನಿದ್ದೇನೆ ಎಂದು ಶಾಸಕ ಗುರುರಾಜ್ ಆಕ್ರೋಶದಿಂದಲೇ ಎಚ್ಚರಿಕೆ ನೀಡಿದರು.