ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹೊತ್ತ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರಿಗೆ ಯಾವುದೇ ರೀತಿಯ ತೊಂದರೆಯನ್ನು ನೀಡದಂತೆ ಪೊಲೀಸರಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಪಾಲ್ಗರ್ನಲ್ಲಿ ನಡೆದ ಹಿಂದೂ ಸಾಧುಗಳ ಹತ್ಯೆಗೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಅರ್ನಬ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದನ್ನು ಅವರು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೀಗ ಕೋರ್ಟ್ ತಡೆ ನೀಡಿದೆ. ಜತೆಗೆ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ಅರ್ನಬ್ಗೆ ಕೋರ್ಟ್ ಸೂಚಿಸಿದೆ.
ಪಾಲ್ಗರ್ನಲ್ಲಿ ನಡೆದ ಹಿಂದೂ ಸಾಧುಗಳ ಹತ್ಯೆಯ ವಿಷಯದಲ್ಲಿ ಸೋನಿಯಾ ಗಾಂಧಿ ಹೆಸರನ್ನು ಅರ್ನಬ್ ತೆಗೆದುಕೊಂಡಿದ್ದರು. ಈ ಕುರಿತು ತಮ್ಮ ರಿಪಬ್ಲಿಕ್ ಟಿವಿಯಲ್ಲಿ ಚರ್ಚಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಇದು ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಅರ್ನಬ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅನೇಕರು ಟ್ವಿಟ್ಟರ್ನಲ್ಲಿ #ArrestAntiIndiaArnab ಹಾಗೂ #arrestarnabgoswami ಎಂಬ ಹ್ಯಾಶ್ ಟ್ಯಾಗ್ಗಳ ಮೂಲಕ ಅರ್ನಬ್ ಬಂಧನಕ್ಕೆ ಆಗ್ರಹಿಸಿದ್ದರು.
ಇದಕ್ಕೆ ಸಂಬಂಧಿಸಿದಂತೆ ಛತ್ತೀಸಗಡ, ರಾಜಸ್ಥಾನ, ಪಂಜಾಬ್, ತೆಲಂಗಾಣ ಮತ್ತು ಜಮ್ಮು, ಕಾಶ್ಮೀರದಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿವೆ. ಇದಕ್ಕೆ ತಡೆ ನೀಡುವಂತೆ ಕೋರಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದೆ.
ಈ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ದೆಹಲಿಯಿಂದ ನಾಗ್ಪುರಕ್ಕೆ ವಿಚಾರಣೆಗೆಂದು ಹೋಗಿ ಬರುವುದು ಕಷ್ಟಸಾಧ್ಯವಾಗುವ ಕಾರಣ, ತಮ್ಮ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿದ ತನಿಖೆಯನ್ನು ಮುಂಬೈಗೆ ವರ್ಗಾಯಿಸುವಂತೆ ಅರ್ನಬ್ ಕೋರಿದ್ದರು. ಅದನ್ನೂ ಕೋರ್ಟ್ ಮಾನ್ಯ ಮಾಡಿದೆ.
ಎರಡು ದಿನಗಳ ಹಿಂದೆ ಅರ್ನಬ್ ಬರುತ್ತಿದ್ದ ಕಾರಿನ ಮೇಲೆ ದಾಳಿ ಮಾಡಲಾಗಿತ್ತು. ಈ ವಿಷಯದ ಬಗ್ಗೆಯೂ ವಿಚಾರಣೆ ವೇಳೆ ಅವರ ಪರ ವಕೀಲರು ಕೋರ್ಟ್ ಗಮನಕ್ಕೆ ತಂದು, ಪೊಲೀಸ್ ರಕ್ಷಣೆ ಒದಗಿಸುವಂತೆ ಕೋರಿದರು. ಅದನ್ನೂ ಕೋರ್ಟ್ ಮಾನ್ಯ ಮಾಡಿದ್ದು, ರಕ್ಷಣೆ ನೀಡುವಂತೆ ಮುಂಬೈ ಪೊಲೀಸರಿಗೆ ಆದೇಶಿಸಿದೆ. ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದೆ. (ಏಜೆನ್ಸೀಸ್)