More

    ರಾಜ್ಯದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ 126% ಸಾಧನೆ: ಸಚಿವ ಸುಧಾಕರ್

    ಬಳ್ಳಾರಿಯಲ್ಲಿ ನಡೆಯುತ್ತಿರುವ ಅಂಧತ್ವ ಮುಕ್ತ ಅಭಿಯಾನದಲ್ಲಿ 12,668 ಮಂದಿಗೆ ಚಿಕಿತ್ಸೆ

    ಮಧುಮೇಹಿಗಳಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಗ್ರೀನ್ ಲೇಸರ್’ ಚಿಕಿತ್ಸೆ ಪರಿಚಯ

    ಬೆಂಗಳೂರು: ರಾಜ್ಯದ 4,28,451 ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಕೇಂದ್ರ ಸರ್ಕಾರ ನೀಡಿದ್ದ 3,39,600 ಗುರಿಯನ್ನು ಮೀರಿ ರಾಜ್ಯ ಸರ್ಕಾರ ಶೇ.126 ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

    ರಾಜ್ಯದಲ್ಲಿ ಅಂಧತ್ವ ನಿವಾರಣೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಎನ್.ಜಿ.ಒ, ವೈದ್ಯಕೀಯ ಕಾಲೇಜುಗಳು, ಇತರೆ ವಲಯಗಳಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಇನ್ನು ಮಧುಮೇಹದಿಂದಾಗಿ ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಅನೇಕರು ಡಯಾಬಿಟಿಕ್ ರೆಟಿನೋಪತಿ ಸಮಸ್ಯೆ ಹೊಂದಿದ್ದು, ಅವರಿಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಗ್ರೀನ್ ಲೇಸರ್’ ಚಿಕಿತ್ಸೆ ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

    ವಿಜಯಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನೇತ್ರ ತಜ್ಞರು ವಿಶೇಷ ಪರಿಣತಿ ಹೊಂದಿದ್ದು, ಇಂತಹ ವಿನೂತನ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಮಾಡುತ್ತಿದ್ದಾರೆ. ಇದರಿಂದ ಉತ್ತಮ ಫಲಿತಾಂಶ ದೊರೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    ರಾಜ್ಯಾದ್ಯಂತ ವಿಸ್ತರಣೆಗೆ ಕ್ರಮ:

    ರೆಟಿನೋಪತಿ ಸಮಸ್ಯೆಯಿಂದ ಕಣ್ಣಿನ ದೃಷ್ಟಿಗೆ ಕ್ರಮೇಣ ಹಾನಿಯಾಗುವ ಸಂಭವ ಇರುತ್ತದೆ. ಇದನ್ನು ಪತ್ತೆ ಮಾಡಿ ಅಗತ್ಯ ಕಂಡುಬಂದಲ್ಲಿ ಗ್ರೀನ್ ಲೇಸರ್‌ ಚಿಕಿತ್ಸೆ ನೀಡಿ ಸಮಸ್ಯೆ ಪರಿಹರಿಸಬಹುದಾಗಿದೆ. ಡಯಾಬಿಟಿಕ್ ರೆಟಿನೋಪತಿಗೆ ಒಳಗಾದವರಿಗೆ ಎಷ್ಟು ಬೆಳಕಿದ್ದರೂ ಕಾಣುವುದಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಒಂದು ತಿಂಗಳಿಂದ 40 ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಈ ಸೌಲಭ್ಯವನ್ನು ರಾಜ್ಯದ ಇತರೆ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

    ಅಂಧತ್ವ ಮುಕ್ತ ಅಭಿಯಾನ:

    ಬಳ್ಳಾರಿಯಲ್ಲಿ ಕೈಗೊಂಡಿರುವ ಅಂಧತ್ವ ಮುಕ್ತ ಜಿಲ್ಲೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಜಿಲ್ಲೆಯ ಪ್ರತಿಯೊಂದು ತಾಲ್ಲೂಕುಗಳಲ್ಲಿ ವಿಶೇಷ ಸಂಚಾರಿ ಚಿಕಿತ್ಸಾ ಶಿಬಿರಗಳನ್ನು ನಡೆಸಿ, ತಾಲ್ಲೂಕು ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಶಿಬಿರದಲ್ಲಿ ಸರಾಸರಿ 22 ಮಂದಿಗೆ ಶಸ್ತ್ರಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಸಂಚಾರಿ ಆರೋಗ್ಯ ಘಟಕದಿಂದ ಬಳ್ಳಾರಿ, ಸಂಡೂರು, ಸಿರುಗುಪ್ಪದಲ್ಲಿ ಪ್ರತಿ ತಿಂಗಳು ಎರಡು ನೇತ್ರ ತಪಾಸಣಾ ಶಿಬಿರ ನಡೆಸಲಾಗುತ್ತಿದ್ದು, ಶೇ.98 ಬಿಪಿಎಲ್ ಕುಟುಂಬದ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಶೇ.60 ರಿಂದ 70 ಮಹಿಳೆಯರಿದ್ದಾರೆ. ಅಂಧತ್ವ ಮುಕ್ತ ಬಳ್ಳಾರಿ ಅಭಿಯಾನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಉಚಿತ ಕನ್ನಡಕ, ಕ್ಯಾಟರಾಕ್ಟ್ ಸರ್ಜರಿ ಮಾಡಲಾಗುತ್ತಿದೆ. ಈವರೆಗೆ 12,668 ಮಂದಿಗೆ ನೇತ್ರ ಚಿಕಿತ್ಸೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts