ಶಿವಮೊಗ್ಗ: ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಸಿದ್ಧಗೊಂಡ ಜಾತಿ ಆಧಾರಿತ ಜನಗಣತಿ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಒಬಿಸಿ ವಿಭಾಗದ ಅಧ್ಯಕ್ಷ ಇ.ಎನ್.ರಮೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜನಗಣತಿ ವರದಿ ಆಧಾರದಲ್ಲಿ ಎಲ್ಲ ಹಿಂದುಳಿದ ವರ್ಗಗಳ ಅಭಿವೃದ್ಧಿಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನಗಣತಿ ವರದಿ ಬಿಡುಗಡೆ ಮಾಡುವ ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಊಟ ಮತ್ತು ವಸತಿಗಾಗಿ ಕೇವಲ 1,500 ರೂ. ನೀಡುತ್ತಿದ್ದು, 2,500 ರೂ.ಗೆ ಹೆಚ್ಚಿಸಬೇಕು. ದೇವರಾಜ ಅರಸು ಪ್ರತಿಭಾ ಪುರಸ್ಕಾರದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು 20 ಸಾವಿರ ರೂ.ಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಕಾಂಗ್ರೆಸ್ ಸರ್ಕಾರ 3 ಕೋಟಿ ರೂ.ಗೂ ಹೆಚ್ಚು ಹಣ ಖರ್ಚು ಮಾಡಿದ್ದು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಾಳಜಿ ವಹಿಸಿತ್ತು. ಶಿವಮೊಗ್ಗ ಜಿಲ್ಲೆಗೂ ಸಾಕಷ್ಟು ಹಣ ಬಿಡುಗಡೆ ಮಾಡಿತ್ತು. ಆದರೆ, ಬಿಜೆಪಿ ಸರ್ಕಾರ 2020-21 ನೇ ಸಾಲಿನಲ್ಲಿ ಹಿಂದುಳಿದ ಸಮಾಜಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ಒಬಿಸಿ ರಾಜ್ಯ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಉಮಾಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಬಿ.ಅಶೋಕ್ಕುಮಾರ್, ಉಪಾಧ್ಯಕ್ಷ ಶ್ರೀಧರಮೂರ್ತಿ ನವಲೆ, ರಮೇಶ್ ಶಂಕರಘಟ್ಟ, ಎನ್.ಪಿ.ಧರ್ಮರಾಜ್ ಸುದ್ದಿಗೋಷ್ಠಿಯಲ್ಲಿದ್ದರು.