ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಿಇಟಿ-2024ರ ಪಠ್ಯಕ್ರಮ ಹೊರತಾದ ಪ್ರಶ್ನೆಗಳನ್ನು ನೀಡಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ರುಪ್ಸಾ ಕರ್ನಾಟಕ ಸಂಘಟನೆಯು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.
ರಾಜ್ಯ ಪಠ್ಯಕ್ರಮ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸಿಇಟಿಯಲ್ಲಿ ಮೋಸವಾಗುವುದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.
ಮೂರೂವರೆ ಲಕ್ಷ ವಿದ್ಯಾರ್ಥಿಗಳು ಎರಡು ವರ್ಷ ಸತತ ಶ್ರಮವಹಿಸಿ ಸಿಇಟಿ ಬರೆದಿದ್ದಾರೆ. ಆದರೆ, ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮ ಹೊರತಾದ ಪ್ರಶ್ನೆಗಳನ್ನು ನೋಡಿ ಗಾಬರಿ ಮತ್ತು ಆತಂಕಗೊಂಡಿದ್ದಾರೆ. 50 ಪಠ್ಯಕ್ರಮ ಹೊರತಾದ ಪ್ರಶ್ನೆಗಳನ್ನು ನೀಡಿರುವುದರಿಂದ ತಮ್ಮ ಶೈಕ್ಷಣಿಕ ಭವಿಷ್ಯದ ಮೇಲೆ ಭಯ ಬಂದಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದ್ದಾರೆ.
ಗಣಿತ ವಿಷಯಕ್ಕೆ ಮಾತ್ರ 2 ಕೃಪಾಂಕ ನೀಡಿ ಉಳಿದ ಪಠ್ಯಕ್ರಮ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಕಣ್ಣೊರೆಸುವ ತಂತ್ರ ಮಾಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದಾರೆ.
ಪಿಯು ಇಲಾಖೆಯು ಯಾವ ಕಾರಣದಿಂದ ಕೆಲ ಪಠ್ಯಗಳನ್ನು ಕೈ ಬಿಡುವ ನಿರ್ಧಾರ ಮಾಡಿದೆ. ಇದರು ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದಿಲ್ಲವೇ? ಹಾಗಾದರೆ,, ಕಾರಣ ಯಾರು? ಈ ತಾರತಮ್ಯದ ಹಿಂದೆ ಟ್ಯೂಷನ್ ಮಾಫಿಯಾ ಇದೆಯೇ? ಎಂಬುದನ್ನು ಪತ್ತೆ ಹಚ್ಚಬೇಕು. ಕೆಇಎ ಮತ್ತು ಪಿಯು ಇಲಾಖೆ ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆ ಇದೆ. ಈ ಸಂಘರ್ಷದಿಂದಲೇ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.