ಉಡುಪಿ: ಜಿಲ್ಲೆಯಲ್ಲಿ ಜುಲೈ 30, 31ರಂದು ನಡೆಯುವ ಸಿಇಟಿ ಪರೀಕ್ಷೆಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 3,912 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲ್ಲ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಎಸ್ಒಪಿ ಪ್ರಕಾರ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಹಾಗೂ ಪರೀಕ್ಷೆಯ ಮೊದಲು, ನಂತರ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುವಂತೆ ಪಿಯು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪಾಸಿಟಿವ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ: ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡುತ್ತಿದ್ದು, ವಿದ್ಯಾರ್ಥಿಗಳು ddpuudupi.blogspot.com ನಲ್ಲಿ ನೋಂದಾಯಿಸಿಕೊಳ್ಳುವಂತೆ ಅವರು ತಿಳಿಸಿದರು. ಪರೀಕ್ಷೆ ದಿನಾಂಕದೊಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ನಲ್ಲಿಯೇ ಪ್ರತ್ಯೇಕ ಕೊಠಡಿ ಸೌಲಭ್ಯ ದೊಂದಿಗೆ ಸಿಸಿಟಿವಿ ಅಳವಡಿಸಿ, ವೈದ್ಯರ ಮೂಲಕ ಪ್ರಶ್ನೆ ಪತ್ರಿಕೆ ವಿತರಿಸಿ, ಪರೀಕ್ಷೆಯ ನಿಯಮ ಅನುಸರಿಸಿ, ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗುವುದು. ಈ ವ್ಯವಸ್ಥೆ ಜಿಲ್ಲೆಯಲ್ಲಿ ಪ್ರಥಮ ಪ್ರಯತ್ನ ಎಂದರು.
ಪರೀಕ್ಷೆಗೆ ಪ್ರತ್ಯೇಕ ವ್ಯವಸ್ಥೆ
ಕಾಸರಗೋಡು: ಕರ್ನಾಟಕ ಮೆಡಿಕಲ್ ಪ್ರವೇಶಾತಿ ಪರೀಕ್ಷೆಗೆ ಜುಲೈ 30, 31ರಂದು ಹಾಜರಾಗುವ ವಿದ್ಯಾರ್ಥಿಗಳಿಗೆ ಕಾಸರಗೋಡು ಜಿಲ್ಲೆಯ ವಿವಿಧೆಡೆಗಳಿಂದ ತಲಪಾಡಿವರೆಗೆ ತೆರಳಲು ಪ್ರತ್ಯೇಕ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗುವುದು. ಅಲ್ಲಿಂದ ಕರ್ನಾಟಕ ಸರ್ಕಾರ ವ್ಯವಸ್ಥೆ ಮಾಡುವ ವಾಹನಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದು. ಇವರು ಬೇರೆ ಸಾರ್ವಜನಿಕ ಸಂಚಾರ ವ್ಯವಸ್ಥೆಗಳನ್ನು ಬಳಸುವಂತಿಲ್ಲ. ಪರೀಕ್ಷೆ ಮುಗಿಸಿ ಮರಳಿದ ಈ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರು 7 ದಿನಗಳ ಕಾಲ ರೂಂ ಕ್ವಾರಂಟೈನ್ನಲ್ಲಿರಬೇಕು. ಇವರು 5ನೇ ದಿನ ಆಂಟಿಜೆನ್ ತಪಾಸಣೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ. ನಡೆಯಲಿದೆ.