ಗದಗ: ಇದೇ ಏಪ್ರಿಲ್ 18 ಮತ್ತು 19 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಗಮ ಹಾಗೂ ಸುಲಲಿತವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸುಗಮ ನಿರ್ವಹಣೆ ಸಂಬಂಧ ಅಧಿಕಾರಿಗಳ ಜೊತೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ರೀತಿ ಗೊಂದಲಕ್ಕೆ ಅವಕಾಶ ಮಾಡದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯಲ್ಲಿ ಬಿಸಿಗಾಳಿ ಇರುವುದರಿಂದ ಪರೀಕ್ಷಾ ಕೊಠಡಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಜೊತೆಗೆ ಗಾಳಿ ಬೆಳಕು ಇರುವಂತೆ ನೋಡಿಕೊಳ್ಳಬೇಕು. ಹಾಗೆಯೇ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನ ಹರಿಸಬೇಕು. ಶಿಸ್ತು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಅವರು ನಿರ್ದೇಶನ ನೀಡಿದರು.
ಸುರೇಖಾ , ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕುರ್ತಕೋಟಿ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಇತರರು ಇದ್ದರು.
ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ: ಗದಗ ನಗರದ ಸರಕಾರಿ ಪದವಿ ಪೂರ್ವ ಕಾಲೇಜು, ಎಚ್.ಸಿ.ಇ.ಎಸ್.ಪದವಿ ಪೂರ್ವ ಕಾಲೇಜು, ಕೆ.ವಿ.ಎಸ್.ಆರ್.ಪದವಿ ಪೂರ್ವ ಕಾಲೇಜು, ಶ್ರೀ ತೋಂಟದ ಸಿದ್ಧೇಶ್ವರ ವಿಜ್ಞಾನ ಮತ್ತು ವಾಣಿಜ್ಯ ಪಿ.ಯು.ಕಾಲೇಜ,ವಿದ್ಯಾದಾನ ಸಮಿತಿ ಬಾಲಕರ ಪದವಿ ಪೂರ್ವ ಕಾಲೇಜು, ಬೆಟಗೇರಿಯ ಎ.ಎಸ್.ಎಸ.ಪದವಿ ಪೂರ್ವ ಕಾಲೇಜು, ನಗರದ ಮೈಲಾರಪ್ಪ ಮೆಣಸಗಿ ಪದವಿ ಪೂರ್ವ ಕಾಲೇಜು, ಜಗದ್ಗುರು ತೋಂಟದಾರ್ಯ ಪದವಿ ಪೂರ್ವ ಕಾಲೇಜು, ಲೋಯೊಲಾ ಪದವಿ ಪೂರ್ವ ಕಾಲೇಜು, ವಿದ್ಯಾದಾನ ಸಮಿತಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸನ್ಮಾರ್ಗ ಪದವಿ ಪೂರ್ವ ಕಾಲೇಜು, ಕರ್ನಾಟಕ ಪದವಿ ಪೂರ್ವ ಕಾಲೇಜು.
ಎಸ್,ಎಸ್,ಎಲ್.ಸಿ ಪರೀಕ್ಷೆ
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ
ಗದಗ (ಕರ್ನಾಟಕ ವಾರ್ತೆ) ಏಪ್ರಿಲ್ 12: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಚ/ ಎಪ್ರಿಲ್-2024 ರ ಮಾಹೆಯಲ್ಲಿ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 15 ರಿಂದ ಏಪ್ರಿಲ್ 29 ರವರೆಗೆ ಜಿಲ್ಲೆಯ 6 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ.
ಈ ಪರೀಕ್ಷಾ ಮೌಲ್ಯಮಾಪನ ಕಾರ್ಯವು ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಏಪ್ರಿಲ್ 15 ರಿಂದ ಏಪ್ರಿಲ್ 29 ರವರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಈ ಅವಧಿಯಲ್ಲಿ ಮೌಲ್ಯಮಾಪನ ಕಾರ್ಯಗಳಿಗಾಗಿ ನೇಮಿಸಲಾದ ಸಿಬ್ಬಂದಿಯ ಹೊರತಾಗಿ ಬೇರೆ ಯಾವುದೇ ಅನಧಿಕೃತ ವ್ಯಕ್ತಿಗಳ ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಆದೇಶಿಸಿದ್ದಾರೆ.