ಮುಳಬಾಗಿಲು: ಅರ್ಹತೆ ಆಧಾರದ ಮೇಲೆ ನನಗೆ ರಾಜ್ಯದ ಎಸ್ಸಿ ಮೋರ್ಚಾ ಅಧ್ಯಕ್ಷ ಸ್ಥಾನ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ತಾಲೂಕಿನ ಕುರುಡುಮಲೆ ವಿನಾಯಕ ದೇವಾಲಯ, ಮುಳಬಾಗಿಲಿನ ಆಂಜನೇಯಸ್ವಾಮಿ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾತನಾಡಿದರು.
ಮುಳಬಾಗಿಲಿನಿಂದಲೇ ಎಸ್ಸಿ ಮೋರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಬೇರೆ ರಾಜಕೀಯ ಪಕ್ಷಗಳಿಗೆ ಬಿಜೆಪಿ ಮಾದರಿಯಾಗಿದೆ. ಎಲ್ಲ ವರ್ಗದ ಹಿತದ ಜತೆಗೆ ಶೋಷಿತ ಸಮಾಜದ ಸೇವೆ ಮಾಡಲು ಇಲ್ಲಿ ಬಹಳಷ್ಟು ಅವಕಾಶವಿದೆ ಎಂದರು.
ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಶಾಸಕರು ಆಯ್ಕೆಯಾಗುತ್ತಾರೆ. ಈ ನಿಟ್ಟಿನಲ್ಲಿ ಮುಳಬಾಗಿಲು ಸೇರಿ ಜಿಲ್ಲಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಅಶೋಕರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಸ್.ರಮೇಶ್, ನಂಗಲಿ ವಿಶ್ವನಾಥರೆಡ್ಡಿ, ನಗರ ಘಟಕ ಅಧ್ಯಕ್ಷ ಕಲ್ಲುಪಲ್ಲಿ ಕೆ.ಜೆ.ಮೋಹನ್, ಪ್ರಧಾನ ಕಾರ್ಯದರ್ಶಿಗಳಾದ ಶಂಕರಕೇಸರಿ, ವಿ.ಟಿ.ಶಂಕರ್, ನಗರ ಯುವಮೋರ್ಚಾ ಅಧ್ಯಕ್ಷ ಗರಡಿ ಆರ್.ಕಿರಣ್ ಕುಮಾರ್, ಜಿಲ್ಲಾ ಖಜಾಂಚಿ ಕೆ.ಜಿ.ವೆಂಕಟರಮಣ, ಯುವ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ವಿ.ವೇಣುಗೋಪಾಲ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಬಿ.ಎನ್.ಸುಧಾ ಮತ್ತಿತರರು ಇದ್ದರು.