ಯಳಂದೂರು: ತಾಲೂಕಿನ ಗುಂಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸೋಮವಾರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.
ಗ್ರಾಮದ ಪ್ರತಿ ಬೀದಿಯಲ್ಲೂ ಚುನಾವಣೆ ಹಾಗೂ ಮತದಾನ ಮಾಡುವ ಮಹತ್ವ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಮೆರವಣಿಗೆ ಮಾಡಿದರು. ನಂತರ ಗ್ರಾಮದ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೀರಭದ್ರಸ್ವಾಮಿ ಮಾತನಾಡಿ, ದೇಶದಲ್ಲಿ ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಇದು ಹಬ್ಬದಂತೆ ಆಚರಿಸಬೇಕು. ನಮ್ಮ ಸಂವಿಧಾನ ಮತದಾನದ ಮೂಲಕ ನಮಗೆ ನಮಗೆ ಸೂಕ್ತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ದೊಡ್ಡ ಜವಾಬ್ದಾರಿಯನ್ನು ನೀಡಿದೆ. ಮತದಾನ ಮಾಡುವುದು ನಮ್ಮ ಹಕ್ಕಾಗಿದೆ. ಇದನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಡಬೇಕು. 18 ವರ್ಷ ತುಂಬಿದ ಎಲ್ಲರೂ ಮತದಾನಕ್ಕೆ ಅರ್ಹರಾಗಿದ್ದು ನಮ್ಮ ಹೆಸರನ್ನು ಕಡ್ಡಾಯವಾಗಿ ಮತಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬರೂ ತಮ್ಮ ಬೀದಿಯ, ಮನೆಯ ವ್ಯಾಪ್ತಿಯ ಪರಿಮಿತಿಯಲ್ಲಿ ಬರುವ ಮತಗಟ್ಟೆಯಲ್ಲಿ ಮತದಾನ ನಡೆಯುವ ದಿನ ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಈ ನಿಟ್ಟಿನಲ್ಲಿ ನಮ್ಮ ದೇಶವನ್ನು ಸದೃಢಗೊಳಿಸುವ ಕೆಲಸ ಮಾಡಬೇಕು. ಈ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ನಮ್ಮ ದೇಶದಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಿದ್ದರೂ ಮತದಾನಕ್ಕೆ ತತ್ಸಾರ ಮನೋಭಾವನೆಯನ್ನು ಹೊಂದಿದ್ದು, ಈ ಮನೋವೃತ್ತಿಯನ್ನು ಬಿಟ್ಟು ಕಡ್ಡಾಯವಾಗಿ ಮತದಾನವನ್ನು ಮಾಡಬೇಕು ಎಂದು ಸಲಹೆ ನೀಡಿದರು.
ಪಿಡಿಒ ಮಂಜುನಾಥ್, ಮುಖ್ಯ ಶಿಕ್ಷಕ ಲಿಂಗೇಗೌಡ, ದೈಹಿಕ ಶಿಕ್ಷಕ ಎಂ.ಸಿ. ಮಹದೇವಸ್ವಾಮಿ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.