ಚಾಮರಾಜನಗರ: ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ಜಿಲ್ಲಾ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಭಾರತಿ ಸಲಹೆ ನೀಡಿದರು.
ನಗರದ ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ವಿದ್ಯಾರ್ಥಿ ಜೀವನದಲ್ಲಿ ತಾವು ವಿದ್ಯಾಭ್ಯಾಸದ ಜತೆಗೆ ತಮಗೆ ಇಷ್ಟವಾದ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದನ್ನು ಸಾಧಿಸುವ ಗುರಿಯನ್ನು ಇಟ್ಟಕೊಳ್ಳಿ. ಗುರುವಿನ ಸಹಕಾರ, ಹಿರಿಯರ ಮಾರ್ಗದರ್ಶನದ ಜತೆಗೆ ಶ್ರದ್ಧೆಯಿಂದ ಪರಿಶ್ರಮ ಪಟ್ಟರೆ ಯಶಸ್ಸು ನಿಮ್ಮದಾಗುತ್ತದೆ. ಈ ನಿಟ್ಟನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಗಿ ತಮ್ಮ ಪೋಷಕರಿಗೆ ಉತ್ತಮ ಹೆಸರನ್ನು ತಂದುಕೊಡಿ ಎಂದರು.
ಕಾಲೇಜಿನ ಪ್ರಾಂಶುಪಾಲ ದೇವರಾಜಮೂರ್ತಿ ಮಾತನಾಡಿ, ತಮ್ಮ ಮಕ್ಕಳ ಸಾಧನೆಯನ್ನು ನೋಡಿ ಬಹಳ ಸಂತೋಷದಿಂದ ಇಲ್ಲಿಗೆ ಆಗಮಿಸಿದ್ದೀರಿ, ಕಾಲೇಜು ಎಂದರೆ ಒಂದು ಕುಟುಂಬ ಇದ್ದಂತೆ. ಪ್ರಾಂಶುಪಾಲರು ಅದರ ಮುಖ್ಯಸ್ಥರಾಗಿರುತ್ತಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಎಲ್ಲರೂ ಸಹ ನಮ್ಮ ಮಕ್ಕಳಾಗಿದ್ದೀರಿ. ಮುಂದಿನ ವರ್ಷ ಇದಕ್ಕಿಂತ ಹೆಚ್ಚಿನ ವಿದ್ಯಾರ್ಥಿನಿಯರು ಅತ್ಯುನ್ನತ್ತ ದರ್ಜೆಯಲ್ಲಿ ಪಾಸಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಪಿಯುಸಿ ವಿಭಾಗದಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾದ 87 ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಆಂಗ್ಲ ವಿಭಾಗದ ಮುಖ್ಯಸ್ಥ ಎಚ್.ಎಸ್. ವೀರೇಶ್, ಕನ್ನಡ ವಿಭಾಗದ ಮುಖ್ಯಸ್ಥ ಎ.ಎಂ. ಮಹದೇವಸ್ವಾಮಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಾಹಿದಾ ಉಮ್ಮಅಫ್ಸಾ, ಉಪನ್ಯಾಸಕ ಗಿರೀಶ್, ಅಂಬಿಕಾದೇವಿ ಉಪಸ್ಥಿತರಿದ್ದರು.