ಮೈಸೂರು: ಚಾಮುಂಡಿಬೆಟ್ಟದಲ್ಲಿ ಶುಕ್ರವಾರ ತಾಯಿ ಚಾಮುಂಡೇಶ್ವರಿಯ ರಥೋತ್ಸವ ಶ್ರದ್ಧಾ, ಭಕ್ತಿಯೊಂದಿಗೆ ಸಂಭ್ರಮದಿಂದ ನಡೆಯಿತು. ಕರೊನಾ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ರಥೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿಲ್ಲ. ಚಾಮುಂಡಿಬೆಟ್ಟ ಗ್ರಾಮಸ್ಥರು ಮಾತ್ರ ಪಾಲ್ಗೊಂಡಿದ್ದರು.
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಥೋತ್ಸವಕ್ಕೆ ಚಾಲನೆ ನೀಡಿದರು. ಯದುವೀರ್ ಸಾಂಪ್ರದಾಯಿಕ ವಾಗಿ ಪೂಜೆ ಸಲ್ಲಿಸಿ ತೇರು ಎಳೆದರು. ಈ ಬಾರಿ ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ ಮಾಡಲಾಯಿತು. ಕೋವಿಡ್ ಹಿನ್ನೆಲೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ತೆಪ್ಪೋತ್ಸವ ನಡೆಸುವುದಿಲ್ಲ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು. ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ ಇತರರು ಭಾಗವಹಿಸಿದ್ದರು.