ಚನ್ನರಾಯಪಟ್ಟಣ: ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕರೊನಾ ವೈರಸನ್ನು ನಿಯಂತ್ರಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕೋವಿಡ್-19 ಮೇಲ್ವಿಚಾರಣಾ ಸಭೆಯಲ್ಲಿ ಮಾತನಾಡಿ, ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳು ಶ್ಲಾಘನೀಯ ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಾಯಕತ್ವದಲ್ಲಿ ಹಾಸನ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಇನ್ನು ಉಳಿದಿರುವ ಕಾಮಗಾರಿಗಳಿಗೆ ಯೋಜನೆ ರೂಪಿಸಿ ಅಭಿವೃದ್ಧಿಗೊಳಿಸಲಾಗುವುದು. ಈಗಾಗಲೇ ಜಿಲ್ಲೆ ಹಾಗೂ ತಾಲೂಕಿನ ಬಹುತೇಕ ಸಮಸ್ಯೆಗಳನ್ನು ವೀಕ್ಷಿಸಿದ್ದು, ಅಧಿಕಾರಿಗಳು ಹಾಗೂ ಶಾಸಕರ ಸಹಕಾರದೊಂದಿಗೆ ಬಗೆಹರಿಸಲಾಗುವುದು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಜಿಲ್ಲೆ ಹಾಗೂ ತಾಲೂಕಿನ ಏತ ನೀರಾವರಿ ಯೋಜನೆಗಳಡಿ ಜಮೀನು ಕಳೆದುಕೊಂಡಿರುವ ಸಾಕಷ್ಟು ರೈತರಿಗೆ ಇನ್ನೂ ಪರಿಹಾರದ ಹಣ ಸಿಕ್ಕಿಲ್ಲ. ಅತ್ತ ಜಮೀನೂ ಇಲ್ಲ. ಆದರೆ ಗುತ್ತಿಗೆದಾರರಿಗೆ ಮಾತ್ರ ಕೋಟಿಗಟ್ಟಲೆ ಹಣ ಬಿಡುಗಡೆಯಾಗುತ್ತಿದೆ. ದಯವಿಟ್ಟು ರೈತರಿಗೆ ಕೃಷಿ ಜಮೀನಿನ ಪರಿಹಾರದ ಹಣವನ್ನು ಶೀಘ್ರವೇ ಭರಿಸಬೇಕು ಎಂದು ಸಚಿವರ ಗಮನ ಸೆಳೆದರು.
ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿದರು. ಜಿಲ್ಲಾಧಿಕಾರಿ ಆರ್.ಗಿರೀಶ್, ಹಾಸನ ಉಪ ವಿಭಾಗಾಧಿಕಾರಿ ಡಾ.ನವೀನ್ ಭಟ್, ಜಿಪಂ ಸಿಇಒ ಪರಮೇಶ್ವರ್, ಎಸ್ಪಿ ಶ್ರೀನಿವಾಸ್ಗೌಡ, ಸಚಿವರ ಆಪ್ತ ಕಾರ್ಯದರ್ಶಿ ಕಾಂತರಾಜ್, ತಹಸೀಲ್ದಾರ್ ಜೆ.ಬಿ.ಮಾರುತಿ, ತಾಪಂ ಇಒ ಎಚ್.ಎಸ್.ಚಂದ್ರಶೇಖರ್ ಉಪಸ್ಥಿತರಿದ್ದರು.