ಚಿಕ್ಕಮಗಳೂರು: ಪ್ರತಿಯೊಬ್ಬರೂ ಕಾನೂನು ಅರಿವು ಪಡೆದಾಗ ವಂಚನೆಗಳಿಂದ ದೂರ ಉಳಿಯಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ಹೇಳಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚೆಗೆ ವಿದ್ಯಾವಂತರಿಂದಲೇ ಕಾನೂನು ಉಲ್ಲಂಘನೆ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಹಲವು ಕಾನೂನುಗಳು ಇದ್ದರೂ ಬಾಲ್ಯವಿವಾಹ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿದ್ದು ಸಮಾಜಕ್ಕೆ ಕಂಟಕವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಯುವಜನರು ಒಳ್ಳೆಯ ವಿಷಯಗಳನ್ನು ತಿಳಿದುಕೊಂಡರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಕ್ಷಣಿಕ ಆಸೆಗಾಗಿ ತಪ್ಪು ದಾರಿಯಲ್ಲಿ ನಡೆಯಬಾರದು ಎಂದು ಸಲಹೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ.ಎಸ್.ಇಂಪಾ, ವಕೀಲ ಚಂದ್ರಶೇಖರ್, ಪ್ರಭಾರ ಪ್ರಾಚಾರ್ಯ ಶ್ರೀಧರ್, ಉಪನ್ಯಾಸಕರು ಹಾಗೂ ಸಿಬ್ಬಂದಿ ಇದ್ದರು.