ಮಡಿಕೇರಿ:
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಕೂಸಿನ ಮನೆಯೂ ಕೂಡ ಒಂದಾಗಿದೆ. ಮಕ್ಕಳ ಪಾಲನೆ ಮತ್ತು ಪೋಷಣೆ ಅತ್ಯಂತ ಸೂಕ್ಷ್ಮವಾಗಿದ್ದು, ಸೂಕ್ತ ರೀತಿಯಲ್ಲಿ ತರಬೇತಿ ಪಡೆದುಕೊಳ್ಳುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದರು.
ಕೂಡಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿನ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆರಂಭಗೊAಡ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳ ಕೇರ್ ಟೇಕರ್ಸ್ ಸೇವಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಮನರೇಗಾ ಕೂಲಿಕಾರರ ಮಕ್ಕಳಿಗೂ ಸೂಕ್ತ ಪಾಲನೆ ಮತ್ತು ಪೋಷಣೆ ಒದಗಿಸುವ ನಿಟ್ಟಿನಲ್ಲಿ ಕೂಸಿನ ಮನೆಗಳನ್ನು ಆರಂಭಿಸಲಾಗಿದೆ.
ಮಹಿಳಾ ಕೂಲಿಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಮತ್ತು ಮಹಿಳಾ ಸಬಲೀಕರಣದ ಭಾಗವಾಗಿ ಕೂಸಿನ ಮನೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ರಾಜ್ಯಾದ್ಯಂತ ಕೇರ್ ಟೇಕರ್ಸ್ಗಳಿಗೆ ತರಬೇತಿ ನಡೆಯುತ್ತಿದ್ದು, ಜಿಲ್ಲೆಯಲ್ಲಿಯೂ 2 ತಂಡಗಳಲ್ಲಿ 14 ದಿನಗಳ ಕಾಲ ತರಬೇತಿ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳು ವಿವರಿಸುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಧನರಾಜು ಮಾತನಾಡಿದರು. ಸೋಮವಾರಪೇಟೆ ತಾ.ಪಂ.ಇಒ ಜಯಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ರಾಕೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್, ಸಂಪನ್ಮೂಲ ವ್ಯಕ್ತಿಗಳಾದ ಸಾವಿತ್ರವ್ವ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸವಿತಾ, ಸಹಾಯಕ ಜಿಲ್ಲಾ ಕಾರ್ಯಕ್ರಮಾಧಿಕಾರಿ ಮಹೇಂದ್ರ, ತಾಂತ್ರಿಕ ಸಂಯೋಜಕ ರಂಜಿತ್, ತಾಲೂಕು ಐಇಸಿ ಸಂಯೋಜಕ ನರೇಂದ್ರ ಇತರರು ಇದ್ದರು.