ಚಿಕ್ಕೋಡಿ: ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಾರ್ವಜನಿಕರು ಸರ್ಕಾರದ ಕಾರ್ಯಕ್ರಮಗಳ ಅರಿವು ಮೂಡಿಸಲು ಸಹಕಾರ ನೀಡಬೇಕು. ಈ ಮೂಲಕ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ತೊಲಗಿಸಲು ಸಾಧ್ಯವಾಗಲಿದೆ ಎಂದು ನ್ಯಾಯಾಧೀಶ ಎಸ್.ಎಲ್. ಚವ್ಹಾಣ ಅಭಿಪ್ರಾಯಪಟ್ಟರು.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಕಂದಾಯ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಹಸೀಲ್ದಾರ್ ಸುಭಾಷ ಸಂಪಗಾವಿ ಮಾತನಾಡಿ, ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪ್ರಯುಕ್ತ ಜಾಗೃತಿ ರಥವು ಪಟ್ಟಣ ಹಾಗೂ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಜೂ. 12ರಿಂದ 15 ರವರೆಗೆ ಸಂಚರಿಸಲಿದೆ. 14ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ನಾಗೇಶ ಕಿವಡ, ನ್ಯಾಯಾಧೀಶ ಶ್ರೀಕಾಂತ ಟಿ., ವಿಜಯಕುಮಾರ ಬಾಗಡೆ, ಮಂಜುಳಾ ಬಿ., ಯೋಗೇಶ ಕೆ., ಕಲ್ಮೇಶ ಕಿವಡ, ಡಾ. ವಿ.ವಿ. ಶಿಂಧೆ ಇತರರು ಉಪಸ್ಥಿತರಿದ್ದರು.