ಚನ್ನರಾಯಪಟ್ಟಣ: ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರೆ ಅಪರಾಧಗಳಿಗೆ ಪ್ರಾಥಮಿಕ ಹಂತದಲ್ಲಿ ಕಡಿವಾಣ ಹಾಕಲು ಸಾಧ್ಯ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಅರುಣ್ ಕುಮಾರಿ ಅಭಿಪ್ರಾಯಪಟ್ಟರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಹಾಗೂ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ನಾಳಿನ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಮುಖ್ಯ ಎಂದರು.
ಮಕ್ಕಳಿಗೆ ಕಾನೂನು ಅರಿವಿನ ಮಹತ್ವವನ್ನು ತಿಳಿಸಬೇಕು. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಸಂಚಾರಿ ನಿಯಮದ ಬಗ್ಗೆ ತಿಳಿದುಕೊಳ್ಳಬೇಕು. ಮಹಿಳೆಯರು, ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಸಹಕಾರಿಯಾಗಿದೆ ಎಂದರು.
ವಿದ್ಯಾರ್ಥಿ ದಿಸೆಯಲ್ಲಿ ಸಂವಿಧಾನವನ್ನು ತಿಳಿದು ಕಾನೂನಿಗೆ ಗೌರವ ನೀಡುತ್ತಾ ಜೀವನವನ್ನು ಸುಂದರ ಮತ್ತು ಸಾರ್ಥಕವಾಗಿ ರೂಪಿಸಿಕೊಳ್ಳಬೇಕು. ಕಾನೂನು ಅರಿತು ನಡೆದರೆ ಸಮಸ್ಯೆಗಳನ್ನು ಸರಳವಾಗಿ ನಿಭಾಯಿಸಬಹುದು. ಕಾನೂನಿಗೆ ಗೌರವ ನೀಡಿದರೆ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗುತ್ತದೆ. ಆದ್ದರಿಂದ ಪಠ್ಯದ ಜತೆ ಕಾನೂನು ಅರಿವನ್ನು ಹೊಂದುವುದು ಮುಖ್ಯವಾಗಿದೆ. ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಹಾಗೂ ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ಸಲಹೆ ನೀಡಿದರು.
ಇಂದಿನ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇತರ ಅನವಶ್ಯಕ ಕಾರ್ಯಗಳನ್ನು ಮಾಡದೇ ಕೇವಲ ಶಿಕ್ಷಣದತ್ತ ಗಮನ ಹರಿಸಬೇಕು. ಎಲ್ಲರೂ ಕೀಳರಿಮೆ ಬಿಟ್ಟು ಶಿಕ್ಷಣಕ್ಕೆ ಹೆಚ್ಚನ ಮಹತ್ವ ನೀಡಬೇಕು, ಶಾಲಾ ಮಕ್ಕಳು ತಮ್ಮ ಉತ್ತಮ ವಿದ್ಯಾಭ್ಯಾಸವನ್ನು ಮಾಡಿ ಶೈಕ್ಷಣಿಕ ಪ್ರಗತಿ ಹೊಂದಬೇಕು ಎಂದು ತಿಳಿಸಿದರು.
ವಕೀಲ ಮಂಜೇಶ್ ಅವರು ಅಂತಾರಾಷ್ಟ್ರೀಯ ಮಕ್ಕಳ ದಿನಾಚರಣೆ ಮಹತ್ವ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಎ.ಡಿ.ಕುಮಾರ್, ಸಹ ಕಾರ್ಯದರ್ಶಿ ಶ್ವೇತಾ, ನ್ಯಾಯಾಂಗ ಇಲಾಖೆಯ ನೌಕರ ಭಗವಾನ್, ಮುಖ್ಯಶಿಕ್ಷಕ ರಮೇಶ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.