ಶನಿವಾರಸಂತೆ: ಸಮಿಪದ ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನವನ್ನು ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲಾ ವಿದ್ಯಾರ್ಥಿಗಳೇ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅಭಿಷೇಕ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಮಕ್ಕಳ ದಿನದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ವಿದ್ಯಾರ್ಥಿ ಕಿರಣ್ಕುಮಾರ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಮತ್ತು ನಿರೂಪಣೆ ಮೂಲಕ ಶಾಲಾ ಶಿಕ್ಷಕರು, ಪಾಲಕರು ಹಾಗೂ ಸಭಿಕರ ಗಮನ ಸೆಳೆದರು.
ಶಾಲಾ ವಿದ್ಯಾರ್ಥಿಗಳಿಂದ ನಾಟಕ, ನೃತ್ಯ, ಗಾಯನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಆಶಾ, ಸಹ ಶಿಕ್ಷಕರಾದ ಸ್ನೇಹಾ ಬಸಮ್ಮ, ರೀನಾ, ಉಷಾದೇವಿ, ಕವಿತಾ, ಚಿತ್ರಕಲಾ, ಗೌರಮ್ಮ, ಮಂಜುಳಾ, ನಂದಿನಿ ಶಾಲೆಯ ಆಂಗ್ಲ ಮಾಧ್ಯಮ ವಿಭಾಗದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಾದ ಸೂರಜ್, ಚರಣ್ ಹಾಜರಿದ್ದರು.