ಬೆಟ್ಟದಪುರ: ಗ್ರಾಮಾಂತರ ಭಾಗಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂತಹ ಸಭೆಗಳು ಅನುಕೂಲವಾಗಲಿದೆ ಎಂದು ಬೆಟ್ಟದತುಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ ಲಕ್ಷ್ಮೀ ಅರಸ್ ತಿಳಿಸಿದರು.
ಬೆಟ್ಟದಪುರ ಸಮೀಪದ ಬೆಟ್ಟದತುಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಭೆಯಲ್ಲಿ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ಶಾಲೆಯ ಆವರಣ ಹಾಗೂ ಹೊರಗೆ ತಮ್ಮ ದೈನಂದಿನ ದಿನಚರಿಯಲ್ಲಿ ಸಮಸ್ಯೆಗಳು ಕಂಡು ಬಂದರೆ ತಕ್ಷಣವೇ ಶಿಕ್ಷಕರಿಗೆ ಮಾಹಿತಿ ನೀಡಬೇಕು. ಶಾಲೆಯಲ್ಲಿ ಪೌಷ್ಟಿಕ ಆಹಾರ ಸೇವನೆ ಬಗ್ಗೆ ಸಮಸ್ಯೆ ಇದ್ದರೆ ಸಭೆಯಲ್ಲಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಪಿಡಿಒ ಚೇತನ್ ಮಾತನಾಡಿ, ಶಾಲೆಯಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಶೌಚಗೃಹದ ಸಮಸ್ಯೆಗಳಿದ್ದರೆ ಮಾಹಿತಿ ನೀಡಬೇಕು. ಶಾಲೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು. ಪಂಚಾಯಿತಿಗೆ ಒಳಪಡುವ ಗ್ರಾಮಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಮಾಹಿತಿ ನೀಡಿದರೆ ಪಾಲಕರ ಮನವೊಲಿಸಿ ಮತ್ತೆ ಶಾಲೆಗೆ ಕರೆತರುವ ಕೆಲಸ ಮಾಡುತ್ತೇವೆ ಎಂದರು.
ಶಾಲೆಯ ಶೌಚಗೃಹದ ಗುಂಡಿಗಳನ್ನು ಸ್ವಚ್ಛಗೊಳಿಸಬೇಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, ಶಾಲೆಯ ಸುತ್ತ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ, ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಗ್ರಾಪಂ ಉಪಾಧ್ಯಕ್ಷ ಶಿವಣ್ಣ, ಸದಸ್ಯರಾದ ಸತೀಶ್, ಸಣ್ಣಾಪ್ಪಜಿಗೌಡ, ಮುಖ್ಯಶಿಕ್ಷಕ ಸಿಂಗ್ರಿ ನಾಗರಾಜ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಶೇಖರ್, ರಾಘವೇಂದ್ರ ಮುಖಂಡರಾದ ಯಶೋದರ, ಕಿಟ್ಟಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.