More

    ಕಾಡುಹಂದಿ ದಾಳಿಗೆ ವ್ಯಕ್ತಿ ಸಾವು: ಪರಿಹಾರಕ್ಕೆ ಒತ್ತಾಯಿಸಿ ಸಂಬಂಧಿಕರು ಹಾಗೂ ಗ್ರಾಮಸ್ಥರ ಪ್ರತಿಭಟನೆ

    ಮಂಡ್ಯ: ನಾಗಮಂಗಲ ತಾಲೂಕು ಚಿಕ್ಕಯಗಟಿ ಗ್ರಾಮದ ಸಮೀಪ ಗುರುವಾರ ಸಂಜೆ ಕಾಡುಹಂದಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಮೃತನ ಸಂಬಂಧಿಕರು ಹಾಗೂ ಗ್ರಾಮಸ್ಥರು ಶುಕ್ರವಾರ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಶವಾಗಾರದ ಎದುರು ಪ್ರತಿಭಟನೆ ನಡೆಸಿದರು.
    ತಾಲೂಕಿನ ಚಿಂದಗಿರಿದೊಡ್ಡಿ ಗ್ರಾಮದ ಪುಟ್ಟಸ್ವಾಮಿರ ಮಗ ಶಿವ(48) ಮೃತ. ಈತ ಚಿಕ್ಕಯಗಟಿ ಬಳಿ ಮಂಡ್ಯ-ನಾಗಮಂಗಲ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದಾಗ ಕಾಡು ಹಂದಿ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಶಿವು ಕೆಳಕ್ಕೆ ಬಿದ್ದಿದ್ದಾನೆ. ಮತ್ತೆ ದಾಳಿ ನಡೆಸಿದ ಕಾಡುಹಂದಿ ಆತನ ಎಡ ತೊಡೆ ಮತ್ತು ಮರ್ಮಾಂಗಕ್ಕೆ ಗುದ್ದಿದ ಪರಿಣಾಮ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲಿಯೇ ಅಸುನೀಗಿದ್ದಾನೆ.
    ನಾಗಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಿಮ್ಸ್‌ಗೆ ರವಾನಿಸಿದ್ದರು. ಶುಕ್ರವಾರ ಬೆಳಗ್ಗೆ ಜಮಾಯಿಸಿದ ಮೃತನ ಸಂಬಂಧಿಕರು ಹಾಗೂ ಚಿಂದಗಿರಿದೊಡ್ಡಿ ಗ್ರಾಮಸ್ಥರು ಅಲೆಮಾರಿ ಬುಡಕಟ್ಟು ಮಹಾಸಭಾ ಮತ್ತು ಮಂಡ್ಯ ಜಿಲ್ಲಾ ಉಳುವ ಸಮಾಜದ ಆಶ್ರಯದಲ್ಲಿ ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
    ಶಾಸಕ ರವಿಕುಮಾರ್ ಭೇಟಿ: ಮಾಹಿತಿ ತಿಳಿದು ಶಾಸಕ ರವಿಕುಮಾರ ಗಣಿಗ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಸಂಘಟನೆಗಳ ಮುಖಂಡರು, ಅಲೆಮಾರಿ ಸಮುದಾಯಕ್ಕೆ ಸೇರಿದ ಶಿವು ಕುಟುಂಬಕ್ಕೆ ಆಸ್ತಿ ಇಲ್ಲ, ಕೂಲಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ ದುರಂತದಲ್ಲಿ ಮನೆ ನಿರ್ವಹಣೆ ಮಾಡುತ್ತಿದ್ದ ಶಿವು ಸಾವನಪ್ಪಿರುವುದರಿಂದ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಅವರ ಬದುಕು ಮೂರಾಬಟ್ಟೆಯಾಗಿದೆ ಎಂದು ಹೇಳಿದರು.
    ಮೃತನ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು. ಕುಟುಂಬದ ಜೀವನ ಭದ್ರತೆಗಾಗಿ ಸರ್ಕಾರಿ ಉದ್ಯೋಗ ನೀಡಬೇಕು, ಮೃತನ ಪತ್ನಿ ಅನಾರೋಗ್ಯ ಪೀಡಿತರಾಗಿದ್ದು, ಆಕೆಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು. ಬೇಡಿಕೆಗೆ ಸ್ಪಂದಿಸಿದ ಶಾಸಕ ರವಿಕುಮಾರ್ ಗಣಿಗ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದೆಂದು ಘೋಷಿಸಿದರು. ಪರಿಹಾರದ ಹಣವನ್ನು ಮೂರು ನಾಲ್ಕು ದಿನದ ನಂತರ ನೀಡಲಾಗುವುದು. ಖಾಯಂ ಸರ್ಕಾರಿ ಉದ್ಯೋಗ ನೀಡಲು ಅವಕಾಶ ಇಲ್ಲದ ಕಾರಣ ಯಾವುದಾದರೂ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ದೊರಕಿಸಿ ಕೊಡುವ ಭರವಸೆ ನೀಡಿದರು. ಅಷ್ಟೇ ಅಲ್ಲದೆ ಮೃತನ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂ ಪರಿಹಾರ ನೀಡಿದರು. ಇದೇ ವೇಳೆ ಸಹಾಯಕ ಅರಣ್ಯ ಅಧಿಕಾರಿ ಶಿವರಾಮು ಹಾಜರಿದ್ದರು.
    ಕುಳುವ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಕೊತ್ತಗೆರೆ, ಗೌರವಾಧ್ಯಕ್ಷ ರಾಮಶೆಟ್ಟಿ ಹನಕೆರೆ, ರಾಜ್ಯ ಉಪಾಧ್ಯಕ್ಷ ವೆಂಕಟೇಶ್, ಕೃಷ್ಣಕುಮಾರ್ ಗಣಂಗೂರು, ರವಿ ಕೊಡಗಹಳ್ಳಿ, ಟೆಂಪೋ ರಾಮಕೃಷ್ಣ, ಕೆ.ವಿ.ಸಂದೀಪ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts