ಬೆಂಗಳೂರು: ನಟ ಚಿರಂಜೀವಿ ಸರ್ಜಾ ನಿಧನಕ್ಕೂ ಮುನ್ನ ನಾಯಕನಾಗಿ ಅಭಿನಯಿಸಿದ್ದ ಚಿತ್ರ ‘ರಾಜಮಾರ್ತಾಂಡ’. ಎರಡು ವರ್ಷಗಳ ಹಿಂದೆಯೇ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿತ್ತು. ಆದರೆ, ಡಬ್ಬಿಂಗ್ ಮಾತ್ರ ಬಾಕಿಯಿತ್ತು. ಕೆಲ ತಿಂಗಳ ಹಿಂದಷ್ಟೇ ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಸರ್ಜಾ ಧ್ವನಿ ನೀಡಿದ್ದರು.
ರಾಮ್ನಾರಾಯಣ್ ನಿರ್ದೇಶನದ ‘ರಾಜಮಾರ್ತಾಂಡ’ ಚಿತ್ರ ಇದೀಗ ಬಿಡುಗಡೆಗೆ ಸಿದ್ಧವಾಗಿದೆ. ಅ. 6ರಂದು ಧ್ರುವ ಸರ್ಜಾ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿನಿಮಾ ರಿಲೀಸ್ ಮಾಡಲು ‘ರಾಜಮಾರ್ತಾಂಡ’ ಟೀಮ್ ನಿರ್ಧರಿಸಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನವಿದೆ.
ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರಿಗೆ ಮೂವರು ನಾಯಕಿಯರಿದ್ದು, ದೀಪ್ತಿ ಸೇಠಿ, ಮೇಘಶ್ರೀ, ತ್ರಿವೇಣಿ ಅಭಿನಯಿಸಿದ್ದಾರೆ. ಉಳಿದಂತೆ ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.