ಮಂಡ್ಯ: ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ದಾಳಿ ನಡೆಸಿದ ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಗ್ರಾಮದ ಬಸಮ್ಮಣ್ಣಿ ಗಾಯಗೊಂಡು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂದಿನಂತೆ ಜಾನುವಾರುಗಳನ್ನ ಜಮೀನಿಗೆ ಹೊಡೆದುಕೊಂಡು ಹೋಗುತ್ತಿದ್ದ ವೇಳೆ ಪೊದೆಯಲ್ಲಿ ಅಡಗಿದ್ದ ಚಿರತೆ ಏಕಾಏಕಿ ದಾಳಿ ನಡೆಸಿದೆ. ಈ ಸಮಯದಲ್ಲಿ ಜೋರಾಗಿ ಕಿರುಚಿಕೊಂಡಾಗ ಗ್ರಾಮಸ್ಥರು ಓಡಿ ಬಂದ ಹಿನ್ನೆಲೆಯಲ್ಲಿ ಚಿರತೆ ಸ್ಥಳದಿಂದ ಕಾಲ್ಕಿತ್ತಿದೆ. ಆದರೂ ಮಹಿಳೆ ಕಾಲಿಗೆ ಗಂಭೀರ ಗಾಯಗಳಾಗಿವೆ. ಗ್ರಾಮದ ಸುತ್ತಮುತ್ತ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದರಿಂದ ಆತಂಕ ಹೆಚ್ಚಾಗಿದ್ದು, ತಕ್ಷಣ ಕಾರ್ಯಾಚರಣೆ ನಡೆಸಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.