ಚಿತ್ರದುರ್ಗ: ಕರೊನಾ ಹಿನ್ನೆಲೆಯಲ್ಲಿ ಮೆದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿದ್ಯಾನಗರ ಹಾಗೂ ಸುತ್ತ ಮುತ್ತಲಿನ ಬಡವಾವಣೆ ನಿವಾಸಿಗಳು ಗರಿಷ್ಠ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಜೆ.ಪರಶುರಾಮ್ ಮನವಿ ಮಾಡಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಕರೊನಾ ತಡೆಗೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಸಂಘದ ಅಧ್ಯಕ್ಷ ಎಸ್.ಮಂಜುನಾಥ್, ಕಾರ್ಯದರ್ಶಿ ಜ್ಞಾನಮೂರ್ತಿ ಇತರರು ಮನವಿ ಮಾಡಿದ್ದಾರೆ.
ಕೆಮ್ಮು ಅಥವಾ ಸೀನು ಬಂದಾಗ ಕರ ವಸ್ತ್ರದಿಂದ ಮೂಗು, ಬಾಯಿ ಮುಚ್ಚಿಕೊಳ್ಳಬೇಕು. ಆಗಾಗ ಸಾಬೂನಿನಿಂದ ಕೈ ತೊಳೆಯುತ್ತಿರಬೇಕು. ಸ್ಯಾನಿಟೈಸರ್ ಕೂಡ ಬಳಸಬಹುದು ಎಂದು ಸಲಹೆ ನೀಡಿದ್ದಾರೆ.
ಹೊರ ಜಿಲ್ಲೆ, ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಯಾರಾದರೂ ಬಂದರೆ ತಕ್ಷಣ ಅಂತಹವರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಬೇಕು. ಕಾಲಕಾಲಕ್ಕೆ ಸರ್ಕಾರ ನೀಡುವ ಸಲಹೆ, ಸೂಚನೆಗಳನ್ನು ಪಾಲಿಸಿ ಕರೊನಾ ತಡೆಗೆ ಸಹಕಾರ ನೀಡುವಂತೆ ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.