ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಸಲು ಫೆ.6ರಿಂದ ನೋಂದಣಿ ಹಾಗೂ ಹೊಸದುರ್ಗ, ಹಿರಿಯೂರಲ್ಲಿ ಖರೀದಿ ಕೇಂದ್ರ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಜಿಆರ್ಜೆ ದಿವ್ಯಾಪ್ರಭು ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಉಂಡೆ ಕೊಬ್ಬರಿ ಪ್ರತಿ ಕ್ವಿಂಟಾಲ್ಗೆ 11,750 ರೂ. ಬೆಂಬಲ ಬೆಲೆ ಘೋಷಿಸಿದೆ ಎಂದರು.
ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದಿಂದ ಹೊಸದುರ್ಗ ಹಾಗೂ ಹಿರಿಯೂರು ಎಪಿಎಂಸಿ ಆವರಣದಲ್ಲಿ 15 ದಿನಗಳ ಒಳಗೆೆ ಖರೀದಿ ಪ್ರಾರಂಭಿಸಬೇಕು. ಮಾರ್ಗಸೂಚಿಯಂತೆ ಪ್ರತಿ ಎಕರೆಗೆ ಗರಿಷ್ಠ 6 ಕ್ವಿಂಟಾಲ್ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಉಂಡೆ ಕೊಬ್ಬರಿ ಖರೀದಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರುವ ರೈತರು 6ರಿಂದ ಮಾರ್ಚ್ 12ರವರೆಗೆ ಹೆಸರು ನೋಂದಾಯಿಸ ಬಹುದು ಹಾಗೂ ಖರೀದಿ ಪ್ರಕ್ರಿಯೆ ಜುಲೈ 27ರವರೆಗೂ ನಡೆಯಲಿದೆ. ಖರೀದಿಗಾಗಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದರು.
ಜಂಟಿಕೃಷಿ ನಿರ್ದೇಶಕ ರಮೇಶ್ಕುಮಾರ್ ಮಾತನಾಡಿ, ಸದ್ಯ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ಗೆ 9,500ರಿಂದ 10,600 ರೂ. ವರೆಗೆ ಧಾರಣೆ ಇದೆ. ಸರ್ಕಾರ 11,750 ರೂ. ಬೆಂಬಲ ಬೆಲೆ ನಿಗದಿಪಡಿಸಿರುವುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮಾರಾಟಕ್ಕೆ ಮುಂದಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಚಿತ್ರದುರ್ಗ ಎಪಿಎಂಸಿ ಉಪನಿರ್ದೇಶಕ ಎಸ್.ಎನ್.ಪತ್ತಾರ್ ಮಾತನಾಡಿ, ಖರೀದಿಗಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಶಾಖಾ ವ್ಯವಸ್ಥಾಪಕ ಬಸವರಾಜ್ ಮಾತನಾಡಿ, ರೈತರು ತರುವ ಕೊಬ್ಬರಿಯನ್ನು ಬೇರೆ ಚೀಲದಲ್ಲಿ ಪ್ಯಾಕಿಂಗ್ ಮಾಡಲಾಗುವುದು. ಕಳೆದ ವರ್ಷ ಜಿಲ್ಲೆಯಲ್ಲಿ 2075 ಕ್ವಿಂಟಾಲ್ ಕೊಬ್ಬರಿ ಖರೀದಿಸಲಾಗಿತ್ತು. ಈ ವರ್ಷ ಜಿಲ್ಲೆಯಲ್ಲಿ 2500 ಕ್ವಿಂಟಾಲ್ ಉಂಡೆಕೊಬ್ಬರಿ ಖರೀದಿಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಚಂದ್ರಯ್ಯ ಹಿರೇಮಠ, ರಾಜ್ಯ ಉಗ್ರಾಣ ನಿಗಮದ ಅಧಿಕಾರಿ ಮಾರುತಿ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಮೂರ್ತಿ, ಎಪಿಎಂಸಿ ಕಾರ್ಯದರ್ಶಿಗಳಾದ ಗೌತಮ್, ಅತಾವುಲ್ಲ, ಕಾನೂನು ಮಾಪನ ಶಾಸ್ತ್ರ ಇಲಾಖೆ ನಿರೀಕ್ಷಕ ರಾಗ್ಯಾನಾಯ್ಕ ಇತರರು ಇದ್ದರು.
ನೋಂದಣಿ, ಎಫ್ಎಕ್ಯೂ ಗುಣಮಟ್ಟ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಗೊಂದಲಗಳಾಗದಂತೆ ರೈತರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ಆಧಾರ್ ಸಂಖ್ಯೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಹಣ ಪಾವತಿಸಬೇಕು. ರೈತರಿಂದ ಮಾತ್ರ ಉಂಡೆ ಕೊಬ್ಬರಿ ಖರೀದಿಸಬೇಕು. ಇದರಲ್ಲಿ ಯಾವುದೇ ರೀತಿ ಲೋಪ. ದುರುಪಯೋಗ ಆಗಬಾರದು.
ದಿವ್ಯಾಪ್ರಭು ಡಿಸಿ, ಚಿತ್ರದುರ್ಗ.