ಹೊಸದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಿ ಕರೋನಾದಿಂದ ಮಕ್ಕಳನ್ನು ರಕ್ಷಿಸುವ ಹೊಣೆ ಶಿಕ್ಷಣ ಇಲಾಖೆಯ ಮೇಲಿದೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ಬಾಬು ತಿಳಿಸಿದರು.
ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿ ಮಾತನಾಡಿ, ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಪರೀಕ್ಷೆಗಳು ಮುಗಿಯುವರೆಗೆ ಶಾಲಾ ಆವರಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಪಟ್ಣಣದ ಜೂನಿಯರ್ ಕಾಲೇಜು ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಪರೀಕ್ಷೆಗಳು ಮುಗಿಯುವ ತನಕ ಬಂದ್ ಮಾಡಬೇಕು. ವಾಯುವಿಹಾರಕ್ಕಾಗಿ ಆವರಣ ಪ್ರವೇಶಿಸುವ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸುವಸಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಇಒ ಎಲ್ ಜಯಪ್ಪ ಮಾತನಾಡಿ, ದೂರದ ಊರುಗಳ ಮಕ್ಕಳನ್ನು ಕೇಂದ್ರಕ್ಕೆ ಕರೆತರಲು 54 ಸರ್ಕಾರಿ ಬಸ್ಗಳನ್ನು ನಿಗದಿಗೊಳಿಸಲಾಗಿದೆ ಎಂದರು.
ಜಿಪಂ ಸದಸ್ಯ ಕೆ.ಅನಂತ್ ಮಾತನಾಡಿ, ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಕಾರ್ಯಕ್ರಮ ರೂಪಿಸಲಾಗಿತ್ತು. ಕರೊನಾ ಕಾರಣದಿಂದ ಸ್ವಲ್ಪ ಹಿನ್ನಡೆಯಾಗಿದೆ. ಮಕ್ಕಳು ಆತಂಕವಿಲ್ಲದೆ ಪರೀಕ್ಷೆ ಎದುರಿಸಿ ಜಿಲ್ಲೆಗೆ ಉತ್ತಮ ಸ್ಥಾನ ತಂದುಕೊಡಬೇಕು ಎಂದು ತಿಳಿಸಿದರು.
ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರಾದ ನರಸಿಂಹರಾಜ್, ಎಸ್.ಡಿ.ತ್ರೀವೇಣಿ, ಕಂದಿಕೆರೆ ಸುರೇಶ್ಬಾಬು ಮತ್ತಿತರರಿದ್ದರು.