ಚಿತ್ರದುರ್ಗ: ಸಂತ ಶ್ರೇಷ್ಠ ಕನಕದಾಸರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮಹಾನ್ ವ್ಯಕ್ತಿಗಳ ಆದರ್ಶ, ಮೌಲ್ಯಗಳನ್ನು ಪಾಲಿಸುವ ಮೂಲಕ ಅವುಗಳನ್ನು ಮುಂದಿನ ಪೀಳಿಗೆಗೂ ಮನವರಿಕೆ ಮಾಡಿಕೊಡುವ ಜವಾಬ್ದಾರಿ ನಮ್ಮಗಳ ಮೇಲಿದೆ. ಸರಳ ಜೀವನ, ಆದರ್ಶ ವ್ಯಕ್ತಿತ್ವ, ಮಾನವೀಯ ಮೌಲ್ಯಗಳನ್ನು ಬಿತ್ತಿ ಬೆಳೆಸಿದ ಕನಕರಂಥ ದಾಸಶ್ರೇಷ್ಠರನ್ನು ಸ್ಮರಿಸುವುದು ನಮ್ಮ ಕರ್ತವ್ಯ ಎಂದರು.
ಜಿಪಂ ಸಿಇಒ ಟಿ.ಯೋಗೇಶ ಮಾತನಾಡಿ, ಕೋವಿಡ್ ಕಾರಣಕ್ಕೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಕನಕರು ಭಕ್ತ ಪರಂಪರೆ ಹಿನ್ನೆಲೆಯವರಾದರೂ ಅವರ ತತ್ವ, ಸಾಹಿತ್ಯದಲ್ಲಿ ಸಮಾಜದ ಕಳಕಳಿ ವ್ಯಕ್ತವಾಗಿದೆ. ದಾಸರು ಒಂದು ಶಕ್ತಿಯಾಗಿ ದೈವಭಕ್ತಿ ಸಾರುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಅವರೊಂದು ವಿಶ್ವಕೋಶವಾಗಿದ್ದರು ಎಂದರು.
ಉಪ ವಿಭಾಗಾಧಿಕಾರಿ ವಿ.ಪ್ರಸನ್ನ, ಡಿಡಿಪಿಐ ರವಿಶಂಕರ್ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ.ವಿ.ಸದಾಶಿವ, ಕುರುಬ ಸಂಘದ ಜಿಲ್ಲಾಧ್ಯಕ್ಷ ಎಸ್.ಶ್ರೀರಾಮ್, ಪ್ರಧಾನ ಕಾರ್ಯದರ್ಶಿ ಡಿವಿಟಿ ಕರಿಯಪ್ಪ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಮಂಜಪ್ಪ, ಮಾಜಿ ಸದಸ್ಯ ಎಲ್.ತಿಪ್ಪೇಸ್ವಾಮಿ, ಮುಖಂಡರಾದ ಜಿ.ಮನೋಹರ, ಪೈಲ್ವಾನ್ ತಿಪ್ಪೇಸ್ವಾಮಿ, ವಕೀಲ ಆರ್.ಗಂಗಾಧರ್, ಎಚ್.ಹಾಲೇಶಪ್ಪ, ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಇತರರಿದ್ದರು.