ಚಿತ್ರದುರ್ಗ: ಕರೊನಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಅನಗತ್ಯ ಟೀಕೆ ಮಾಡುವುದು ಪ್ರತಿಪಕ್ಷ ನಾಯಕರ ಘನತೆಗೆ ಸಲ್ಲದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರಿಸಿದರು.
ಚಿತ್ರದುರ್ಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೃಷಿಕರನ್ನು ಕೃಷಿ ಇಲಾಖೆ ನಿರ್ಲಕ್ಷಿಸಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಒಂದು ವರ್ಷದ ಎರಡು ತಿಂಗಳ ಅಧಿಕಾರವಧಿಯಲ್ಲಿ ರಾಜ್ಯದಲ್ಲಿ ಏನೂ ಬಿಡದಂತೆ ಅವರು ಲೂಟಿ ಹೊಡೆದಿದ್ದಾರೆ ಎಂದು ದೂರಿದರು.
ಪ್ರಕೃತಿ ವಿಕೋಪದಿಂದಾದ ಬೆಳೆ ನಷ್ಟಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಂದಿಸಿದ್ದಾರೆ. ಕರೊನಾ ಮಹಾಮಾರಿಯನ್ನು ಎಲ್ಲರೂ ಪಕ್ಷಭೇದ ಮರೆತು ಎದುರಿಸಬೇಕಾಗಿದೆ. ಇಂಥ ಸಮಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವಿನಂತಿಸಿಕೊಂಡ ಅವರು, ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಸಾಮಾಜಿಕ ಜಾಲ ತಾಣಗಳನ್ನೂ ರೈತರು ಸಮರ್ಥವಾಗಿ ಬಳಸಿಕೊಳ್ಳಸಬೇಕೆಂದು ಮನವಿ ಮಾಡಿದರು.