ಚಿತ್ರದುರ್ಗ: ಪ್ರತಿಭಾ ಕಾರಂಜಿಯಂಥ ಕಾರ್ಯಕ್ರಮಗಳು ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಹಕಾರಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.
ಶಿಕ್ಷಣ ಇಲಾಖೆಯಿಂದ ನಗರದ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರಲ್ಲಿರುವ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಒದಗಿಸಬೇಕು. ಮಕ್ಕಳ ಕಲೆ ಗುರುತಿಸಿ, ಗೌರವಿಸಬೇಕು. ಪ್ರತಿಭೆ ಇದ್ದರೂ ಪ್ರೋತ್ಸಾಹದ ಕೊರತೆಯಿಂದಾಗಿ ಯಾರೂ ಅವಕಾಶಗಳಿಂದ ವಂಚಿತರಾಗ ಬಾರದು ಎಂದರು.
ಸೂಕ್ತ ತರಬೇತಿ ಇಲ್ಲದಿದ್ದರೂ ಇಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಹೆಮ್ಮೆ ಸಂಗತಿ. ಕಲೆ ಜೀವನಕ್ಕೂ ನೆಲೆಯಾಗಬಹುದು. ಆಶುಭಾಷಣ, ಕೋಲಾಟ, ಭಾಷಣ, ಅಭಿನಯ, ನಾಟಕ, ನೃತ್ಯ ಮೊದಲಾದ ಪ್ರಕಾರಗಳಲ್ಲಿ ಗುರಿ ಸಾಧಿಸಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಿಡಿಪಿಐ ಕೆ.ರವಿಶಂಕರ್ರೆಡ್ಡಿ, ಮೂರು ಹಂತದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ನಡೆಯುತ್ತದೆ. 1ರಿಂದ 4, 5ರಿಂದ 7 ಹಾಗೂ 8-10ನೇ ತರಗತಿ ವರೆಗೆ ಸ್ಪರ್ಧೆಗಳಾಗುತ್ತವೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದವರು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ ಎಂದು ಮಾಹಿತಿ ನೀಡಿದರು.
ಮಹಾರಾಣಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಂಸ್ಥೆ ಅಧ್ಯಕ್ಷ ಸಂದೀಪ್, ಜಿಪಂ ಸದಸ್ಯ ಕೆ.ಟಿ.ಗುರುಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ಸರ್ಕಾರಿ ನೌಕರ ಸಂಘದ ಉಪಾಧ್ಯಕ್ಷ ವೀರಣ್ಣ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್.ಗೋವಿಂದಪ್ಪ ಮತ್ತಿತರರು ಇದ್ದರು.