More

    ಪ್ರಮಥ ಗಣಮೇಳಕ್ಕೆ ಬಿಎಸ್‌ವೈಗೆ ಆಹ್ವಾನ

    ಚಿತ್ರದುರ್ಗ: ಶ್ರೀ ಶಿವಮೂರ್ತಿ ಶರಣರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಪ್ರಮಥ ಗಣಮೇಳದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿತು.

    ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ (ಬಿಬಿಇಸಿ) ಕೇಂದ್ರದಲ್ಲಿ ಫೆ.16ರಂದು ಆಯೋಜಿಸಿರುವ ಶಿವಯೋಗ ಸಂಭ್ರಮ, ಅಸಂಖ್ಯ ಪ್ರಮಥ ಗಣಮೇಳ ಹಾಗೂ ಸರ್ವಶರಣ ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಯಿತು.

    ಜತೆಗೆ ಚಿತ್ರದುರ್ಗ ಜಿಲ್ಲೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಅವರಿಗೆ ಮನದಟ್ಟು ಮಾಡಿಕೊಟ್ಟ ಮುರುಘಾ ಶರಣರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸುವಂತೆ ಮನವಿ ಮಾಡಿದರು.

    ಮಳೆಯನ್ನೇ ಅವಲಂಬಿಸಿರುವ ರೈತ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕಾಲಕಾಲಕ್ಕೆ ಮಳೆಯಾಗದೆ ಉಂಟಾಗುವ ಬರದಿಂದಾಗಿ ಕೃಷಿಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತತ್ವಾರವುಂಟಾಗುತ್ತಿದೆ. ಆದ್ದರಿಂದ ಭದ್ರಾ ಮೇಲ್ದಂಡೆ ಯೋಜನೆ ಸಮಗ್ರ ಕಾಮಗಾರಿಯನ್ನು ತುರ್ತಾಗಿ ನಿರ್ವಹಿಸುವಂತೆ ಒತ್ತಾಯಿಸಿದರು.

    ಜಿಲ್ಲೆಯ ಯುವಜನರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಕೆಲಸಕ್ಕಾಗಿ ಗುಳೆ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಗುಡಿ ಕೈಗಾರಿಕೆ ಮತ್ತಿತರ ಗ್ರಾಮೀಣ ಯುವಕರಿಗೆ ಅನುಕೂಲವಾಗುವಂಥ ಕೈಗಾರಿಕೆಗಳ ಸ್ಥಾಪನೆ ಹಾಗೂ ಜಿಲ್ಲೆ ಸಮಗ್ರ ಅಭಿವದ್ಧಿಗೆ ಆಯವ್ಯಯದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು.

    ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಶ್ರೀ ಜಯಬಸವ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶ್ರೀ ಸಿದ್ಧಬಸವ ಕಬೀರ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ, ಶಿರಸಿ ರುದ್ರದೇವರ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕ ರಾಜ ಕುಮಾರ್ ಪಾಟೀಲ್ ಸೇಡಂ ಹಾಗೂ ಸುಶಿಲ್ ನಮೋಶಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts