ಚಿತ್ರದುರ್ಗ: ದೇಶದಲ್ಲಿ ಕತ್ತಲೆಯಲ್ಲಿದ್ದ 18,374 ಹಳ್ಳಿಗಳಿಗೆ ಕಳೆದ ಎಂಟು ವರ್ಷಗಳಲ್ಲಿ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.
ನಗರದ ತರಾಸು ರಂಗ ಮಂದಿರದಲ್ಲಿ ಆಯೋಜಿಸಿದ್ದ ಉಜ್ವಲ ಭಾರತ, ಉಜ್ವಲ ಭವಿಷ್ಯ, ವಿದ್ಯುತ್ 2047 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ನಿರಂತರವಾಗಿ ದೊರಕುತ್ತಿದೆ. ಭಾರತ ಸರ್ಕಾರ ವಿದ್ಯುತ್ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಕರ ಬದಲಾವಣೆ ತಂದಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ ಎಂದು ಹೇಳಿದರು.
ವಿದ್ಯುತ್ ವಿತರಣಾ ವ್ಯವಸ್ಥೆ ಹಾಗೂ ಗ್ರಾಹಕರ ಸೇವೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಇದರಿಂದ ಕೃಷಿ, ಕೈಗಾರಿಕೆಗಳಿಗೆ ಉತ್ತೇಜನೆ ಸಿಕ್ಕಂತಾಗಿದೆ. ಇಂಗಾಲ ರಹಿತ, ನವೀಕರಿಸಬಹುದಾದ ಇಂಧನ ಮೂಲಗಳ ಮೂಲಕ ವಿದ್ಯುತ್ ಉತ್ಪಾದನೆಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಇದನ್ನು ಜನರಿಗೆ ತಲುಪಿಸುವ ಕಾರ್ಯ ಬೆಸ್ಕಾಂ ಮಾಡಬೇಕು ಎಂದರು.
ಬೆಸ್ಕಾಂ ನೌಕರರು ನಿರಂತರ ಹಗಲು-ರಾತ್ರಿ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಬೆಸ್ಕಾಂ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.