ಆಲ್ದೂರು: ಕೂದುವಳ್ಳಿ ಗ್ರಾಪಂನ ಚಿತ್ತುವಳ್ಳಿ ಗ್ರಾಮದ ನಿವೇಶನ ರಹಿತರು ನಿವೇಶನಕ್ಕಾಗಿ ಆಗ್ರಹಿಸಿ ಅರಣ್ಯ ಇಲಾಖೆಗೆ ಸೇರಿದ ಚಿತ್ತುವಳ್ಳಿ ಗ್ರಾಮದ ಸರ್ವೇ ನಂ. 190/2 ರಲ್ಲಿ ಗುಡಿಸಲುಗಳನ್ನು ನಿರ್ಮಿಸಿ ಸೋಮವಾರ ಪ್ರತಿಭಟನೆ ನಡೆಸಿದರು.
ಗ್ರಾಪಂ ಉಪಾಧ್ಯಕ್ಷ ಗಣೇಶ್ ಮಾತನಾಡಿ, ನಿವೇಶನ ರಹಿತರು ಕಳೆದ 20 ವರ್ಷಗಳಿಂದ ನಿವೇಶನಕ್ಕಾಗಿ ಹೋರಾಟ ನಡೆಸುತ್ತಿದ್ದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನಮಗೆ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಯಾವ ಪಕ್ಷದ ಜನಪ್ರತಿನಿಧಿಗಳು ಆಯ್ಕೆಯಾದರೂ ನಿವೇಶನ ರಹಿತರಿಗೆ ಸೂರು ನಿರ್ಮಿಸಿಕೊಳ್ಳಲು ನಿವೇಶನ ನೀಡುವಲ್ಲಿ ವಿಲರಾಗಿದ್ದಾರೆ ಎಂದು ದೂರಿದರು.
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿಗೆ ಚುನಾವಣೆ ನಡೆಯದ ಕಾರಣ ಜನಪ್ರತಿನಿಧಿಗಳು ಜನರ ಸಮಸ್ಯೆ ಕೇಳುವ ಸ್ಥಿತಿಯಲಿಲ್ಲ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕಂದಾಯ ಹಾಗು ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ ಕಂದಾಯ ಇಲಾಖೆಗೆ ಸೇರಿದ ಜಾಗ ಗುರುತಿಸಿ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಚಿತ್ತುವಳ್ಳಿ ಗ್ರಾಮದ ನಿವೇಶನ ರಹಿತರು ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಳ್ಳಲು ಮುಂದಾಗಿದ್ದಾರೆ. ಈ ಜಾಗವನ್ನು ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಸರ್ವೇ ನಡೆಸಿ ಕಂದಾಯ ಜಾಗ ಗುರುತಿಸಿಬೇಕಿದೆ. ನಂತರ ಆ ಜಾಗವನ್ನು ಕಂದಾಯ ಇಲಾಖೆ ಸ್ಥಳೀಯ ಪಂಚಾಯತಿಗೆ ನೀಡಬೇಕಿದೆ. ನಿವೇಶನಕ್ಕಾಗಿ ಇಲ್ಲಿನ ನಿವೇಶನ ರಹಿತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭನಟಕಾರರು ಅಸಮಧಾನ ವ್ಯಕ್ತಪಡಿಸಿದರು.