ಸವದತ್ತಿ: ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಆನಂದ ಮಾಮನಿ ಅವರನ್ನು ಶುಕ್ರವಾರ ಪಟ್ಟಣದ ಸ್ವಗೃಹದಲ್ಲಿ ತಾಲೂಕಿನ ಚುಳಕಿ ಗ್ರಾಮಸ್ಥರು ಸನ್ಮಾನಿಸಿದರು.
ಚುಳಕಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಆರೋಗ್ಯ ತಪಾಸಣೆಗೆ 10 ಕಿ.ಮೀ. ದೂರದಲ್ಲಿರುವ ಹಿರೇಕುಂಬಿ ಗ್ರಾಮಕ್ಕೆ ಹೋಗಬೇಕಾದ ಪರಿಸ್ಥಿತಿ ಇದೆ. ಗ್ರಾಮಸ್ಥರಿಗೆ ಅನುಕೂಲವಾಗಲು ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಬೇಕು. ಅಲ್ಲಿವರೆಗೂ ಹಿರೇಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗರ್ಭಿಣಿಯರ ತುರ್ತು ಚಿಕಿತ್ಸೆಗೆ ಅನುಕೂಲವಾಗಲು ಪ್ರತ್ಯೇಕ ಆಂಬುಲೆನ್ಸ್ ಸೇವೆ ಒದಗಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಆನಂದ ಮಾಮನಿ, ಚುಳಕಿ ಗ್ರಾಮಸ್ಥರಿಗೆ ಅನುಕೂಲವಾಗಲು ಜಿಲ್ಲಾ ಆರೋಗ್ಯಾಧಿಕಾರಿ ಗಮನಕ್ಕೆ ತಂದು, ಹಿರೇಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು. ಮಹಾಮಾರಿ ಕರೊನಾ ವೈರಸ್ನಿಂದ ಎಲ್ಲೆಡೆ ಕಟ್ಟೆಚ್ಚರವಿದ್ದು, ರಾಜ್ಯದ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ನಂತರ ಚುಳಕಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾತಿಗಾಗಿ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಜತೆ ಮಾತನಾಡುವುದಾಗಿ ತಿಳಿಸಿದರು.
ವೇದಮೂರ್ತಿ ಚಂದ್ರಶೇಖರಯ್ಯ ಚುಳಕಿಮಠ, ಎಲ್.ಪಿ.ಬಾಲರೆಡ್ಡಿ, ಗಂಗನಗೌಡ ಪಾಟೀಲ, ನಿಂಗಪ್ಪ ಮಾಗೊಂಡ, ಪ್ರಕಾಶ ಕೋಟಿ, ಶ್ರೀಕಾಂತ ಮಾಗೊಂಡ ಇದ್ದರು.