ಬೆಂಗಳೂರು: ಸಬ್ಇನ್ಸ್ಪೆಕ್ಟರ್ 545 ಹುದ್ದೆಗಳ ನೇಮಕಾತಿ ಹಗರಣ ಸಂಬಂಧ ನ್ಯಾಯಮೂರ್ತಿ ಬಿ. ವೀರಪ್ಪ ಏಕಸದಸ್ಯವಿಚಾರಣಾ ಆಯೋಗ, ಗುರುವಾರ ಸಿಐಡಿ ಕಚೇರಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದೆ.
ಗುರುವಾರ ಮಧ್ಯಾಹ್ನ 12 ಗಂಟೆಗೆ ಸಿಐಡಿ ಕಚೇರಿಗೆ ಆಗಮಿಸಿದ ಆಯೋಗದ ನ್ಯಾ. ಬಿ. ವೀರಪ್ಪ ಅವರು ಎಸ್ಐ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಮ್ಗೆ ಭೇಟಿ ನೀಡಿ ಭದ್ರತೆ ಕುರಿತು ಪರಿಶೀಲಿಸಿದರು. 1 ತಾಸು ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಕಾರ್ಯ ನಿರ್ವಹಣೆ, ಸಿಸಿ ಕ್ಯಾಮರಾ ಕುರಿತು ಮಾಹಿತಿ ಪಡೆದರು. ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಮತ್ತು ಪೊಲೀಸ್ ನೇಮಕಾತಿ ವಿಭಾಗ ಡಿಜಿಪಿ ಕಮಲ್ ಪಂತ್ ಅವರೊಂದಿಗೆ ಕೆಲ ಕಾಲ ಚರ್ಚಿಸಿ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ,ಎಸ್ಐ ನೇಮಕಾತಿ ಹಗರಣ ಪ್ರಕರಣದ ತನಿಖೆ ಸಂಬಂಧ ತಮ್ಮ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ವಿಭಾಗದ ಸ್ಟ್ರಾಂಗ್ ರೂಮ್ಗೆ ಭೇಟಿ ನೀಡಿದ್ದೇವೆ. ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿ ಇದೆ. ತಿಂಗಳ ಅಂತ್ಯದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು.
ಪೊಲೀಸ್ ನೇಮಕಾತಿಯಲ್ಲಿ ಈ ರೀತಿ ಅಕ್ರಮ ನಡೆದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆ ಆಗುತ್ತದೆ. ಮುಂದೆ ಇಂತಹ ಅಕ್ರಮಗಳು ನಡೆಯದಂತೆ ಸರಿಯಾದ ಮಾರ್ಗ ಕಂಡುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. 27 ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಆರೋಪಿಗಳು ಮತ್ತು ತನಿಖಾಧಿಕಾರಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದೆ.
ಆರೋಪಿಗಳ ಪಾಟೀ ಸವಾಲು ನಡೆಸಲಾಗುತ್ತಿದೆ. ಮತ್ತೊಮ್ಮೆ ಇಂತಹ ಅಕ್ರಮ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ವರದಿಯಲ್ಲಿ ಶಿಫಾರಸ್ಸುಗಳನ್ನು ಉಲ್ಲೇಖಿಸಲಾಗುತ್ತದೆ. ಜತೆಗೆ ಸ್ಟ್ರಾಂಗ್ ರೂಮ್ನ ಬಗ್ಗೆಯೂ ಕೆಲ ಸಲಹೆಗಳನ್ನು ನೀಡುವುದಾಗಿ ನ್ಯಾ. ಬಿ. ವೀರಪ್ಪ ತಿಳಿಸಿದ್ದಾರೆ.