ಗಂಗಾವತಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಇತರ ಬೇಡಿಕೆಗಳ ಈಡೇರಿಕೆಗಾಗಿ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಾದ್ಯಂತ ಸಂಚರಿಸಲಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್ ಹೇಳಿದರು.
ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಿಐಟಿಯು ಮತ್ತು ಅಂಗ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು. ಬೆಲೆ ಏರಿಕೆಯಿಂದ ಬಡವರ ಬದುಕು ಸಂಕಷ್ಟದಲ್ಲಿದ್ದು, ಕಾರ್ಮಿಕರ ಕನಿಷ್ಠ ವೇತನ ಯೋಜನೆ ಜಾರಿಯಾಗುತ್ತಿಲ್ಲ. ಕಾರ್ಖಾನೆ ಕಾಯ್ದೆ ತಿದ್ದುಪಡಿಯಿಂದ ಕಾರ್ಮಿಕರು ಹೆಚ್ಚಿನ ಅವಧಿಯಲ್ಲಿ ಕೆಲಸ ಮಾಡುವ ಸ್ಥಿತಿ ಬಂದಿದೆ.
ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಕೈಬಿಡಬೇಕಿದ್ದು, ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಂಸಿ ವ್ಯವಸ್ಥೆ ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಕೃಷಿ ಇಳುವರಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈ ಬಿಡಬೇಕು. ಕಾರ್ಪೊರೇಟ್ ಕಂಪನಿಗಳ ಸಾಲಮನ್ನಾ ಮಾಡುವ ಸರ್ಕಾರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುತ್ತಿಲ್ಲ. ಅಂಗನವಾಡಿ, ಬಿಸಿಯೂಟ ಯೋಜನೆ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಸೇವೆ ಕಾಯಂ ಇತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜ.23ರಂದು ಸಂಸದ ಚಲೋ ಹಮ್ಮಿಕೊಂಡಿದ್ದು, ಪೂರ್ವಭಾವಿಯಾಗಿ ಎಲ್ಲ ಗ್ರಾಮಗಳಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಾಥಾ ಉದ್ದೇಶ, ಗ್ರಾಮಗಳ ಸಂಚಾರ ಮತ್ತು ಬೇಡಿಕೆಗಳ ಕುರಿತು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲಕ್ಷ್ಮೀ ಸೋನಾರ ಮಾತನಾಡಿದರು. ವಿವಿಧ ಸಂಘಟನೆ ಪದಾಧಿಕಾರಿಗಳಾದ ಗಿರಿಜಮ್ಮ, ಭಾರತಿ ಜೋಶಿ, ಹುಸೇನಪ್ಪ, ಅಂಜನಾದೇವಿ, ರವಿ ಅಕ್ಕಿರೊಟ್ಟಿ, ರಮೇಶ, ಬಾಳಪ್ಪ ಹುಲಿಹೈದರ್ ಇತರರಿದ್ದರು.