ಬೆಂಗಳೂರು: ಇಂದು (ಡಿ.11) ನಡೆದ ಸಭೆಯಲ್ಲಿ ಉಚ್ಛಾಟಿತ ನಾಯಕ ಸಿಕೆ ನಾನು ಅವರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಕೆ ನಾನು ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಿ.ಕೆ.ನಾನು ಅವರನ್ನು ನೇಮಕ ಮಾಡಲಾಗಿದೆ. ಇದು ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್ ಭೇಟಿಗೆ ಹೋಗುತ್ತಿದ್ದೇವೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಅಖಿಲೇಶ್, ನಿತೀಶ್, ರಾಹುಲ್ ಗಾಂಧಿಗೆ ಆಹ್ವಾನ ನೀಡಲಾಗುವುದು ಎಂದರು.
ಪಕ್ಷದಲ್ಲಿನ ಇತರರ ಅಭಿಪ್ರಾಯಕ್ಕೆ ಮನ್ನಣೆ ಕೊಡದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕಿದರೆ ಇದನ್ನು ಪ್ರಶ್ನಿಸುವ ಅಧಿಕಾರ ನಾನೂ ಸೇರಿದಂತೆ ಇತರರಿಗೂ ಇದೆ. ಗಾಂಧೀಜಿಯವರ ತತ್ವಗಳನ್ನು ಬಲಿಕೊಟ್ಟು ಬರೀ ಚುನಾವಣೆಯ ಗೆಲುವಿಗಾಗಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ಎಚ್.ಡಿ.ದೇವೇಗೌಡರ ವರ್ತನೆಯನ್ನು ಇಂದಿನ ಸಭೆಯಲ್ಲಿ ನಾವು ಖಂಡಿಸುತ್ತೇವೆ ಎಂದು ಇಬ್ರಾಹಿಂ ತಿಳಿಸಿದ್ದಾರೆ.
ಡಿಸೆಂಬರ್ 9ರಂದು ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾನು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿತ್ತು. ಆದರೆ ಇದೀಗ ಉಚ್ಛಾಟಿತ ನಾಯಕರೇ ಪರ್ಯಾಯವಾಗಿ ಪದಾಧಿಕಾರಗಳ ನೇಮಕ ಪ್ರಕ್ರಿಯೆ ನಡೆಸಿದ್ದಾರೆ. ಜೆಡಿಎಸ್ ಸಹ ಈಗ ಇಬ್ಭಾಗವಾಗಿದೆ. ಮುಂದೆ ಪಕ್ಷದ ಚಿಹ್ನೆ ಹಾಗೂ ಪಕ್ಷದ ಅಸ್ತಿತ್ವದಕ್ಕಾಗಿ ಕಾನೂನು ಹೋರಾಟುಗಳು ನಡೆಯವ ಲಕ್ಷಣಗಳು ಕಾಣುತ್ತಿವೆ.
ಕೇವಲ 6 ವಾರಗಳಲ್ಲಿ ದ್ವಿಗುಣಗೊಂಡ ಬೆಳ್ಳುಳ್ಳಿ ಬೆಲೆ; ಏರಿಕೆಗೆ ಅಸಲಿ ಕಾರಣಗಳೇನು?