ಬೆಂಗಳೂರು: ನಾನು ಎರಡು ದಿನ ಕೇರಳ ಪ್ರವಾಸ ಮಾಡಿ ಬಂದಿದ್ದು, ಏ.16 ರಂದು ಮತ್ತೆ ಕೇರಳ ಪ್ರವಾಸ ಮಾಡಲಿದ್ದೇನೆ. ನಂತರ ನಮ್ಮ ರಾಜ್ಯದ ಚುನಾವಣೆ ಮುಗಿದ ನಂತರ ತೆಲಂಗಾಣ ಮತ್ತು ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದೇನೆ. ಬಳಿಕ ಮುಖ್ಯಮಂತ್ರಿಯವರ ಜತೆಯಲ್ಲಿ ಉತ್ತರ ಪ್ರದೇಶಕ್ಕೆ ತೆರಳಬೇಕು ಎಂದು ಪಕ್ಷ ತೀರ್ಮಾನಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು,
ಕೇರಳದಲ್ಲಿ ಕಳೆದ ಬಾರಿ ಯುಡಿಎಫ್ 19 ಕ್ಷೇತ್ರಗಳನ್ನು ಗೆದ್ದಿತ್ತು. ಈ ಬಾರಿ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. ಅಲ್ಲಿನ ಮುಖ್ಯಮಂತ್ರಿಯವರು ಕೂಡ ಬಿಜೆಪಿಗೆ ಕೇರಳದಲ್ಲಿ ಒಂದು ಸ್ಥಾನ ಗೆಲ್ಲಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ ಎಂದರು.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಾಜ್ಯದಲ್ಲಿ ಪ್ರಚಾರ ನಡೆಸುವ ಬಗ್ಗೆ ಒಂದೆರಡು ದಿನಾಂಕಗಳನ್ನು ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೂ ಒಂದೆರಡು ದಿನ ರಾಜ್ಯದಲ್ಲಿ ಪ್ರಚಾರ ಮಾಡುವಂತೆ ಮನವಿ ಮಾಡಿದ್ದೇವೆ. ಉತ್ತರ ಭಾರತದಲ್ಲಿ ಖರ್ಗೆ ಅವರಿಗೆ ಬಹಳ ಬೇಡಿಕೆ ಇದೆ. ಮುಂದಿನ ದಿನಗಳಲ್ಲಿ ನಾವು ಇವರ ಪ್ರವಾಸದ ಕುರಿತ ದಿನಾಂಕ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.