ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ. ಅದಕ್ಕೂ ಮುನ್ನ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದು ಕೆಲವು ಕಿವಿಮಾತುಗಳನ್ನು ಹೇಳಿದ್ದು, ಗ್ಯಾರಂಟಿಗಳ ಅನುಷ್ಠಾನಕ್ಕೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ.
ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡಿ. ಗ್ಯಾರಂಟಿಗಳ ಜಾರಿ ಇರುವ ಕಾರಣ ಶಾಸಕರಿಗೆ ಹೆಚ್ಚು ವಿಶೇಷ ಅನುದಾನ ಕೊಡಲು ಆಗುವುದಿಲ್ಲ. ಶಾಸಕರು ಮುಂದಿನ ಎಂಟು ತಿಂಗಳು ಅನುದಾನ ವಿಚಾರವಾಗಿ ಸಹಕಾರ ನೀಡಿ. ಬಿಜೆಪಿ ಮತ್ತು ಜೆಡಿಎಸ್ ಬಗ್ಗೆ ಹೆಚ್ಚು ಗಮನ ಹರಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಅತಿಯಾಗಿ ಡ್ರೈಫ್ರೂಟ್ಸ್ ಸೇವಿಸ್ತೀರಾ? ಅದರಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು
ಕಾಂಗ್ರೆಸ್ ಶಾಸಕರು ಮತ್ತು ಸಚಿವರ ಮೇಲೆ ಸ್ಟಿಂಗ್ ಆಪರೇಷನ್ ಮಾಡುವ ಸಾಧ್ಯತೆ ಇದೆ. ಸರ್ಕಾರಕ್ಕೆ ಕೆಟ್ಟು ಹೆಸರು ತರುವ ಸಾಧ್ಯತೆ ಇದೆ. ವಿಪಕ್ಷಗಳ ಬಲೆಗೆ ಬೀಳಬೇಡಿ. ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳಿಗೆ ಸಂಪನ್ಮೂಲ ಸಂಗ್ರಹದ ಒತ್ತಡದ ನಡುವೆಯೇ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಹದಿನಾಲ್ಕನೇ ಬಜೆಟ್ನಲ್ಲಿ ಯಾವ ರೀತಿಯ ಸರ್ಕಸ್ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಎಡಬಿಡದೆ ಹಣಕಾಸು ಇಲಾಖೆಯ ಸಭೆ ನಡೆಸಿರುವ ಸಿಎಂ ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ನಿರ್ವಹಿಸುವ ಬಗೆ ನೋಡಲು ಅರ್ಥಶಾಸ್ತ್ರಜ್ಞರು ಸಹ ಕಾತರದಿಂದಿದ್ದಾರೆ.