More

    ಮೀಸಲಾತಿ ಹೆಚ್ಚಳ, ಸಂವಿಧಾನದ 9ನೇ ಶೆಡ್ಯೂಲ್​ಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿ ಆಗ್ರಹಿಸಿದ್ದಾರೆ.

    ಈ ಕುರಿತು ಸರಣಿ ಟ್ವೀಟ್​ ಮಾಡಿರುವ ಸಿಎಂ ಹಿಂದೆ ಇದ್ದ ಬಿಜೆಪಿ ಸರ್ಕಾರ ಹಾಗೂ ಜನಸಂಘ ಮೀಸಲಾತಿ ವಿರೋಧಿ ನಿಲುವು ಹೊಂದಿದ್ದವು ಎಂದು ಹರಿಹಾಯ್ದಿದ್ದಾರೆ.

    ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್​ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

    Capture1

    ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

    ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ.ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.

    Capture 2

    ಇದನ್ನೂ ಓದಿ: ವಿಪಕ್ಷದಲ್ಲಿ ಕೂತಿರುವುದೇ ಸರ್ಕಾರದ ವಿರುದ್ಧ ಯುದ್ಧ ಮಾಡುವುದಕ್ಕಾಗಿ: ಮಾಜಿ ಸಿಎಂ ಎಚ್​ಡಿಕೆ

    ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

    ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts